ಬೆಂಗಳೂರು : ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ 50 ಸಾವಿರ ಕೋಟಿಯ ಅನುದಾನವನ್ನು ನೀಡಲು ಒಪ್ಪಿಗೆ ನೀಡಿ, ಪ್ರತಿಪಕ್ಷಗಳ ಬಾಯಿಗೆ ಬೀಗ ಹಾಕಿದೆ.
ಕರ್ನಾಟಕದ ವಿವಿಧ ರಸ್ತೆ ಹಾಗೂ ಹೆದ್ದಾರಿ ಯೋಜನೆಗಳಿಗೆ ಅನುದಾನವನ್ನು ನೀಡಲು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಬೆಂಗಳೂರಿನಲ್ಲಿಯೇ ಅನುಮೋದನೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ನಿತಿನ್ ಗಡ್ಕರಿ ಸಭೆ ನಡೆಸಿ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿ ಪುಣೆ-ಬೆಂಗಳೂರು ಸಂಪರ್ಕಿಸುವ 6 ಪಥದ ಎಕ್ಸಪ್ರೆಸ್ ಹೆದ್ದಾರಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದರಲ್ಲಿ ಶಿವಮೊಗ್ಗ- ತುಮಕೂರು ನಡುವಿನ 4 ಪಥದ ರಸ್ತೆ ಯೋಜನೆಯೂ ಸೇರಿದೆ.