Tuesday, October 22, 2024

ಕೊವಿಡ್ ಮೂರನೇ ಅಲೆ ಎದುರಿಸಲು ಸಜ್ಜಾದ ಭಾರತ

ನವದೆಹಲಿ : ಕೊವಿಡ್ ‌ ಮತ್ತು ಓಮೈಕ್ರಾನ್ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ವೈರಸ್‌ ಮತ್ತಷ್ಟು ವೇಗವಾಗಿ ಹರಡಲಿದೆ ಎಂಬ ಮಾತುಗಳು ಆರೋಗ್ಯ ತಜ್ಞರಿಂದ ಕೇಳಿ ಬರುತ್ತಿದೆ. ಕೊರೋನಾ ಮೂರನೇ ಅಲೆ ತೀವ್ರವಾಗಿ ಅಪ್ಪಳಿಸಿ ಅಪಾರ ಪ್ರಮಾಣದ ದುಷ್ಪರಿಣಾಮ ಬೀರಲಿದೆ ಎಂಬ ಭಯ ಕೂಡ ದೇಶದಲ್ಲಿ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸರಕಾರಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ಕೊವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಎಲ್ಲಾ ಮುಖ್ಯಮಂತ್ರಿಗಳ ಸಭೆ ನಡೆಸಲಾಯಿತು. ಇಂದಿನ ಸಭೆಯಲ್ಲಿ ಕೊವಿಡ್ ಸೋಂಕು ಯಾವ್ಯಾವ ರಾಜ್ಯಗಳಲ್ಲಿ ಯಾವ ಪ್ರಮಾಣದಲ್ಲಿದೆ ಸೋಂಕು ತಡೆಯಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಏನೇನು ಕ್ರಮಗಳನ್ನು ಕೈಗೊಳ್ಳಲಾಗಿದೆ? ದಿನದ ಮತ್ತು ವಾರದ ಪಾಸಿಟಿವ್ ರೇಟ್ ಹೇಗಿದೆ? ಸೋಂಕಿನಿಂದ ಸಾಯುವವರ ಪ್ರಮಾಣ ಹೇಗಿದೆ? ಕೊರೋನಾ ಅಲ್ಲದೆ ಓಮೈಕ್ರಾನ್ ಸೋಂಕು ಹರಡುವಿಕೆ ಪ್ರಮಾಣ ಹೇಗಿದೆ? ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹರಡುವಿಕೆ ತಡೆಯಲು ಮುಂದೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳೇನು ಎಂಬ ವಿಷಯಗಳ ಬಗ್ಗೆ ಸಮಗ್ರವಾದ ಸಮಾಲೋಚನೆ ನಡೆಸಿದರು.ಇದೇ ವೇಳೆ ಮುಖ್ಯಮಂತ್ರಿಗಳಿಂದ ರಾಜ್ಯಗಳ ಪರಿಸ್ಥಿತಿ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಜನವರಿ 9ರಂದು ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ್ದ ಪ್ರಧಾನಿ ಮೋದಿ, ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಮೂಲ ಸೌಕರ್ಯಗಳನ್ನು ಹೆಚ್ಚಿಸಬೇಕು.‌ ಮಿಷನ್ ಮೋಡ್‌ನಲ್ಲಿ ವ್ಯಾಕ್ಸಿನೇಷನ್‌ ಅಭಿಯಾನ ಮಾಡಬೇಕು. ಜೀನೋಮ್ ಸೀಕ್ವೆನ್ಸಿಂಗ್ ಮತ್ತು ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಔಷಧೀಯ ವಿಚಾರದಲ್ಲಿ ನಿರಂತರವಾದ ವೈಜ್ಞಾನಿಕ ಸಂಶೋಧನೆಗಳನ್ನು ನಡೆಸುವುದು ಅಗತ್ಯವಾಗಿದೆ. ಕೋವಿಡ್ ಹೊರತಾದ ಆರೋಗ್ಯ ಸೇವೆಗಳನ್ನು ನೀಡುವ ಬಗ್ಗೆಯೂ ಗಮನ ಹರಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ಜಾಗೃತಿ ಮೂಡಿಸಬೇಕು. ಟೆಲಿಮೆಡಿಸಿನ್ ವ್ಯವಸ್ಥೆ ಮೂಲಕ ಎಲ್ಲೆಡೆ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು. ಅದೇ ಸಲಹೆಗಳನ್ನು ಇಂದಿನ ಸಭೆಯಲ್ಲಿ ಮುಖ್ಯಮಂತ್ರಿಗಳಿಗೂ ನೀಡಿದ್ದಾರೆ.

RELATED ARTICLES

Related Articles

TRENDING ARTICLES