ಬೆಂಗಳೂರು : ಜೆಡಿಎಸ್ ತೊರೆದು ಬಿಜೆಪಿ ಸೇರಲು ಮುಂದಾಗಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.
ಹೊರಟ್ಟಿ ಅವರ ಪಕ್ಷ ಸೇರ್ಪಡೆಗೆ ಸ್ವಪಕ್ಷೀಯರೇ ಭಾರೀ ವಿರೋಧ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದೆಂದು ಬಿಜೆಪಿಯೊಳಗಿನ ನಿಷ್ಠಾವಂತ ಕಾರ್ಯಕರ್ತರು ವರಿಷ್ಠರ ಮೇಲೆ ಒತ್ತಡ ಹಾಕಿದ್ದಾರೆ.
ಈಗಾಗಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಬಿಜೆಪಿಯ ಕೆಲವು ಪ್ರಮುಖ ನಾಯಕರಿಗೆ ಹೊರಟ್ಟಿ ಅವರ ಮೇಲೆ ಕೇಳಿಬಂದಿರುವ ಆರೋಪಗಳು ಹಾಗೂ ಈ ಹಿಂದೆ ಅವರು ಬಿಜೆಪಿ ಕುರಿತು ನೀಡಿರುವ ಪತ್ರಿಕಾ ಹೇಳಿಕೆಗಳ ತುಣುಕುಗಳನ್ನು ದೆಹಲಿಗೆ ತಲುಪಿಸಿದ್ದಾರೆ.
ಹೊರಟ್ಟಿ ಅವರು ಎಂದೂ ಕೂಡ ಬಿಜೆಪಿಗೆ ನಿಷ್ಠಾವಂತರಾಗಿಲ್ಲ. ಈಗ ಜೆಡಿಎಸ್ನಿಂದ ಸ್ಪರ್ಧಿಸಿದರೆ ಸೋಲುವುದು ಕ್ಷೇತ್ರದಲ್ಲಿ ಕಟ್ಟಿಟ್ಟ ಬುತ್ತಿ ಎಂಬ ಏಕೈಕ ಕಾರಣಕ್ಕಾಗಿ ಬಿಜೆಪಿ ಬಾಗಿಲು ಬಡಿದಿದ್ದಾರೆ.