Saturday, April 20, 2024

ಪಂಚರತ್ನ ರಥಯಾತ್ರೆ; 3 ತಿಂಗಳು ಬೆಂಗಳೂರಿಗೆ ಬರಲ್ಲ: ಹೆಚ್ಡಿಕೆ

ಬೆಂಗಳೂರು: ಬರುವ ಆಗಸ್ಟ್‌ನಲ್ಲಿ ಪಂಚರತ್ನ ರಥಯಾತ್ರೆಯನ್ನು ಆರಂಭಿಸಿ ಹಳ್ಳಿ ಹಳ್ಳಿಗೆ ಹೋಗುತ್ತೇನೆ. ಮೂರು ತಿಂಗಳು ಬೆಂಗಳೂರಿಗೆ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿಗೆ ನನ್ನ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಕೊಡುಗೆ ನೀಡಿದ್ದೇನೆ. ಜೆಡಿಎಸ್‌ ಪರ ಒಲವು ಹೊಂದಿರುವ ಮತದಾರರು ಇದ್ದಾರೆ. ಅವರನ್ನು ಭೇಟಿಯಾಗಿ ಪಕ್ಷದ ಕಾರ್ಯಕ್ರಮಗಳು ಮತ್ತು ಉದ್ದೇಶಗಳನ್ನು ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಮುಂದಿನ ಚುನಾವಣೆಯಲ್ಲಿ ಬೆಂಗಳೂರು ನಗರದಿಂದಲೇ ಕನಿಷ್ಠ 17 ಶಾಸಕರು ಜೆಡಿಎಸ್‌ನಿಂದ ಚುನಾಯಿತರಾಗಲಿದ್ದಾರೆ ಎಂದು ಹೇಳಿದರು.

ಎರಡೂ ರಾಷ್ಟ್ರೀಯ ಪಕ್ಷಗಳೂ ಜನರಿಗೆ ಮೋಸ ಮಾಡಿವೆ. ರಾಜ್ಯದ ತೆರಿಗೆಯಲ್ಲಿ ಸಂಬಳ ಪಡೆಯುವ ಐಎಎಸ್ ಅಧಿಕಾರಿಗಳು ಬಂಡವಾಳ ಹೂಡಿಕೆದಾರರಿಗೆ ಗುಜರಾತ್‌ಗೆ ಕಳುಹಿಸುತ್ತಿದ್ದಾರೆ. ಚುನಾವಣೆ ಸಮೀಪ ಬಂದಾಗ ಎಲ್ಲವನ್ನೂ ವಿವರವಾಗಿ ಮಾತನಾಡುತ್ತೇನೆ. ಡಿಸೆಂಬರ್‌ನಲ್ಲಿ ಚುನಾವಣೆ ಬರುವ ಸಾಧ್ಯತೆಗಳು ಇವೆ ಎಂದರು.

‘ರಾಜರಾಜೇಶ್ವರಿ ನಗರದಲ್ಲಿ ಪಕ್ಷದ ಮತಗಳಿವೆ. ಕಾರ್ಯಕರ್ತರು ಇದನ್ನು ಮರೆಯಬಾರದು.‌ ಅಧಿಕಾರ ಇದ್ದಾಗ ನಾವು ಅಕ್ರಮವಾಗಿ ಹಣ ಮಾಡಿಲ್ಲ. ಮೂವರು ಶಾಸಕರು ನಮ್ಮ ಪಕ್ಷದವರಿದ್ದರು. ಅವರೂ ಬೇರೆ ಕಡೆ ಹೋಗಿದ್ದಾರೆ. ಚಾಮರಾಜಪೇಟೆಯಲ್ಲಿ ನಮ್ಮ ನಾಯಕರು ಹೋರಾಟ ಮಾಡಿದರು. ಅದರಿಂದಾಗಿ ಚಾಮರಾಜಪೇಟೆ, ಪುಲಕೇಶಿನಗರ, ಮಹಾಲಕ್ಷ್ಮಿ ಲೇಔಟ್‌ ಗಳಲ್ಲೂ ಗೆದ್ದೆವು. ಪಕ್ಷ ಉಳಿದರೆ ನಾವೆಲ್ಲಾ ಉಳಿಯುತ್ತೇವೆ ಎಂಬುದನ್ನು ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

‘ಭಗವಂತನ ಆಶೀರ್ವಾದದಿಂದ ಎರಡು ಬಾರಿ ಮುಖ್ಯಮಂತ್ರಿಯಾಗಿ ಇತಿಹಾಸದ ಪುಟ ಸೇರಿದ್ದೇನೆ. ‌ಈಗಿನ ಸರ್ಕಾರ ಲೂಟಿ ಹೊಡೆಯುತ್ತಿದೆ. ಇದನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು. ನನಗೆ ಒಂದು ಅವಕಾಶ ಕೊಡಲಿ. ನಮಗೆ ಇಪ್ಪತ್ತು ವರ್ಷ ಬೇಡ ಐದು ವರ್ಷದ ಅವಕಾಶ ಸಾಕು’ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES