ಬೆಂಗಳೂರು: ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್ ಅವರಿಗೆ ನೈತಿಕತೆ ಇಲ್ಲ. ಕಾಂಗ್ರೆಸ್ನ ಇನ್ನೊಂದು ಮುಖವೇ ಭ್ರಷ್ಟಾಚಾರ ಎಂದು ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಸಮಾವೇಶ ನಡೆಯಲಿರುವ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮೋತ್ಸವ ಮಾಡುತ್ತಿರುವುದು ಅವರ ವೈಯಕ್ತಿಕ ವಿಚಾರ. ಆದರೆ ಸಿದ್ದರಾಮಯ್ಯ ಈ ನೆಪದಲ್ಲಿ ಸಿಎಂ ಅವರ ಬಗ್ಗೆ ನಮ್ಮ ನಾಯಕರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಗಡುಗಿದ್ದಾರೆ.
ಇನ್ನು ಇದೇ ವೇಳೆ ಸಿಎಂ ಬೊಮ್ಮಾಯಿ ಮತ್ತು ಆರಗ ಜ್ಞಾನೇಂದ್ರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ಗೆ ನೈತಿಕತೆ ಇಲ್ಲ. ಸಿದ್ದರಾಮಯ್ಯ ಕಾಲದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿತ್ತು. ಹಾಸಿಗೆ ದಿಂಬು ಭ್ರಷ್ಟಾಚಾರ, ರೀಡು ಭ್ರಷ್ಟಾಚಾರ. ಹೀಗೆ ಸಾಲು, ಸಾಲು ಭ್ರಷ್ಟಾಚಾರ ಆಗಿತ್ತು. ಆದರೀಗ ಅವರಿಗೆ ಬೊಮ್ಮಾಯಿಯನ್ನು ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.