Monday, May 20, 2024

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

ಶಿವಮೊಗ್ಗ : ಕಾಡು ಕುದುರೆ ಓಡಿ ಬಂದಿತ್ತ ಖ್ಯಾತಿಯ, ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.

ಕನ್ನಡದ ಸುಗಮ ಸಂಗೀತ ಕ್ಷೇತ್ರದ ಹಿರಿಯ ಗಾಯಕರಲ್ಲಿ ಒಬ್ಬರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲ್ಲಿ 1938ರಲ್ಲಿ ಜನಿಸಿದರು. ಗಾಯನ ಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡ ಸುಬ್ಬಣ್ಣ ಹಿನ್ನೆಲೆ ಗಾಯಕರಾಗಿ ಚಿತ್ರರಂಗ ಪ್ರವೇಶಿಸಿದ್ದು ನಾಟಕಕಾರ, ಚಿತ್ರ ನಿರ್ದೇಶಕ ಕವಿ ಚಂದ್ರಶೇಖರ ಕಂಬಾರರ ‘ಕರಿಮಾಯಿ’ ಮೂಲಕ. 1979ರಲ್ಲಿ ಅಂದಿನ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರಿಂದ ರಜತಕಮಲ ಪ್ರಶಸ್ತಿ ಸ್ವೀಕರಿಸಿದ ಸುಬ್ಬಣ್ಣ ಯಶಸ್ಸಿನ ಕುದುರೆಯೇರಿ ನಡೆದರು.

ಆಕಾಶವಾಣಿ ಎಂ.ಎಸ್.ಐ.ಎಲ್. ಪ್ರಾಯೋಜಕತ್ವದಲ್ಲಿ ಪ್ರಸಾರ ಮಾಡಿದ ಜನಪ್ರಿಯ ಕಾರ‍್ಯಕ್ರಮದಲ್ಲಿ ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ ‘ಬಿದ್ದೀಯಬ್ಬೇ ಮುದುಕಿ.’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಸುಬ್ಬಣ್ಣ ಮನೆ ಮಾತಾದರು. ಸುಬ್ಬಣ್ಣ ಅವರ ಸಾಧನೆಯನ್ನು ಮನ್ನಿಸಿ ರಾಜ್ಯ ಸರ್ಕಾರ ಪ್ರತಿಷ್ಠಿತ ಸಂತ ಶಿಶುನಾಳ ಶರೀಫ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ಅಕಾಡಮಿಯ ಕರ್ನಾಟಕ ಕಲಾ ತಿಲಕ ಪ್ರಶಸ್ತಿ ನೀಡಿ ಗೌರವಿಸಿದರೆ, ಅಭಿಮಾನಿಗಳು ನೂರಾರು ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದ್ದಾರೆ. ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES