Tuesday, May 21, 2024

ನನ್ನ ಹೇಳಿಕೆಯಿಂದ ನೋವುಂಟಾಗಿದ್ದರೆ ಕ್ಷಮೆ ಕೇಳಲು ಸಿದ್ಧ: ಪ್ರೀಯಾಂಕ್ ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತವನ್ನು ಲಂಚ-ಮಂಚದ ಸರ್ಕಾರವೆಂದು ಕರೆದಿದ್ದೆ ಕಾಂಗ್ರೆಸ್ ಶಾಸಕ ಪ್ರೀಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ಸರ್ಕಾರ ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು, ತನ್ನ ಭ್ರಷ್ಟ ರೂಪವನ್ನು ರಕ್ಷಿಸಿಕೊಳ್ಳಲು, ತನ್ನ ತಪ್ಪನ್ನು ಸಮರ್ಥಿಸಿಕೊಳ್ಳಲು ನನ್ನ ಹೇಳಿಕೆಯನ್ನು ಅವರ ಅನುಕೂಲಕ್ಕೆ ತಕ್ಕಂತೆ ತಿರುಚಿ ಕೆಪಿಟಿಸಿಎಲ್​ ಅಕ್ರಮವನ್ನು ಈ ಮೂಲಕ ಮುಚ್ಚಿ ಹಾಕಲು ಬಿಜೆಪಿ ಹೊರಟು ನಿಂತಿದೆ ಎಂದು ಆರೋಪಿಸಿದ್ದಾರೆ.

ಕೆಲಸಕ್ಕಾಗಿ ಬಂದ ಯುವತಿಯನ್ನು ಈ ಸರ್ಕಾರದ ಮಂತ್ರಿ ಮೋಸ ಮಾಡಿ, ಸಿಕ್ಕಿ ಬಿದ್ದು ರಾಜೀನಾಮೆ ನೀಡಬೇಕಾಯಿತು. ಆದರೆ ಅವರ ಬಳಿ ಕ್ಷಮೆಯನ್ನು ಬಿಜೆಪಿಯ ಯಾರೊಬ್ಬರೂ ಕೇಳಲಿಲ್ಲ. ಕೇಂದ್ರ ಮಂತ್ರಿಯೊಬ್ಬರು ಅಶ್ಲೀಲವಾಗಿ ಪರಸ್ತ್ರೀಯೊಬ್ಬರೊಂದಿಗೆ ನಡೆಸಿದ್ದ ವಿಡಿಯೋ ವೈರಲ್ ಆದಾಗ ಹೆಣ್ಣನ್ನು ತೃಣವಾಗಿ ಕಂಡಿದ್ದ ಅವರ ಬಳಿ ಬಿಜೆಪಿಯ ಯಾರೊಬ್ಬರೂ ಕ್ಷಮೆಗೆ ಆಗ್ರಹಿಸಲಿಲ್ಲ. ಸದನದಲ್ಲಿ ಕೂತು ಪೋರ್ನ್ ವೀಕ್ಷಿಸಿ ಇಡೀ ರಾಜ್ಯದ ಹೆಣ್ಣು ಕುಲಕ್ಕೆ ಅಪಮಾನ ಮಾಡಿದವರ ಬಳಿ ಕ್ಷಮೆಗೆ ಆಗ್ರಹಿಸಲಿಲ್ಲ. ಬದಲಾಗಿ ಮತ್ತೆ ಟಿಕೆಟ್ ಕೊಟ್ಟು ಗೆಲ್ಲಿಸಿಕೊಂಡು ಬಂದರು. ಈಗ ಸರಿಯಾದ ಹೇಳಿಕೆ ನೀಡಿದ್ದರಿಂದ ನನಗೆ ರಾಜೀನಾಮೆ ಕೊಡಿ ಎನ್ನುತ್ತಿದ್ದಾರೆ ಎಂದರು.

ಈ ನಾಡಿನ ಹೆಣ್ಣು ಮಕ್ಕಳು ಕೆಲಸಕ್ಕಾಗಿ ಹೋದಾಗ ಅಶ್ಲೀಲವಾಗಿ ವರ್ತಿಸಿ ಮೀ ಟೂ ಪ್ರಕರಣದಲ್ಲಿ ಬಿಜೆಪಿಯ ಇಬ್ಬರು ಸಂಸದರು ಸಿಕ್ಕಿ ಬಿದ್ದಾಗ ಬಿಜೆಪಿ ಅವರ ಬಳಿ ಕ್ಷಮೆ ಕೇಳಲಿಲ್ಲ. ಈ ರಾಜ್ಯದ ಸಚಿವ ಸಂಪುಟದ ಸಚಿವರ ಮಂಚದ ವಿಚಾರ”ಕ್ಕೆ ಹೆದರಿ ಹೈಕೋರ್ಟ್ ನಿಂದ ಸ್ಟೇ ತಂದಾಗ ಬಿಜೆಪಿ ಇವರ್ಯಾರ ಬಳಿಯೂ ಕ್ಷಮೆ ಕೇಳಲಿಲ್ಲ ಎಂದು ಶಾಸಕ ಪ್ರೀಯಾಂಕ್ ಖರ್ಗೆ ಅವರು ರಾಜ್ಯ ಬಿಜೆಪಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.
ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ನಾನು ಅರ್ಥೈಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ದನಿದ್ದೇನೆ. ಆದರೆ ಬಿಜೆಪಿ, ಹೆಣ್ಣು ಮಕ್ಕಳಿಗೆ ನಿಜವಾಗಿ ಅಪಮಾನ ಮಾಡಿರುವ ತನ್ನೆಲ್ಲಾ ನಾಯಕರ ಬಳಿ ರಾಜೀನಾಮೆ ಪಡೆದು ರಾಜ್ಯದ ಮಹಿಳಾ ಸಮುದಾಯಕ್ಕೆ ಎಸಗಿದ ಅವಮಾನಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಕೆಲಸ ಮಾಡಲಿದೆಯಾ ಇದಕ್ಕೆ ಸಕಾರಾತ್ಮಕ ರೀತಿಯಲ್ಲಿ ಬಿಜೆಪಿಯಿಂದ ಉತ್ತರವನ್ನು ನಿರೀಕ್ಷಿಸಬಹುದಾ ಎಂದಿದ್ದಾರೆ.

RELATED ARTICLES

Related Articles

TRENDING ARTICLES