ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸ್ಪೀಡ್ ಗೆ ನಾನು ಬ್ರೇಕ್ ಹಾಕುತ್ತಿದ್ದೇನೆಯೇ ಹೊರತು, ಆ ಕೆಲಸ ಕಾಂಗ್ರೆಸ್ ನವರಿಂದ ಸಾಧ್ಯವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕೈ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ನಾಯಕರನ್ನು ಮನೆ ಮುರುಕರು ಎಂದು ಮೂದಲಿಸಿದ್ದಾರೆ. ಜೊತೆಗೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಎಳೆಎಳೆಯಾಗಿ ಬಿಡಿಸಿಟ್ಟರು.
ಹತ್ತು ಪರಪ್ಪನ ಅಗ್ರಹಾರ ಜೈಲು ಬೇಕು
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಘನ ಘೋರವಾಗಿ ಲೂಟಿ ಮಾಡುತ್ತಿದೆ. ಒಂದು ವೇಳೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಹತ್ತು ಪರಪ್ಪನ ಅಗ್ರಹಾರ ಜೈಲು ಕಟ್ಟಿಸಿ ಅಲ್ಲಿಗೆ ಬಿಜೆಪಿಯವರನ್ನು ತುಂಬ ಬೇಕಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಸರ್ಕಾರ ವಿಜಯ ಸಂಕಲ್ಪ ಯಾತ್ರೆ ಮಾಡುತ್ತಿದೆ. ಸರ್ಕಾರದಲ್ಲಿ ಏನು ಸಾಧನೆ ಮಾಡಿದ್ದೇವೆ ಎಂದು ಆ ಹೆಸರು ಇಟ್ಟಿದ್ದಾರೊ ಗೊತ್ತಿಲ್ಲ. ಭ್ರಷ್ಟಾಚಾರದ ಆರೋಪದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಅರೆಸ್ಟ್ ಮಾಡಿಸಿದ್ದಾರೆ. ಆದರೆ ಇಲ್ಲಿನ ಬಿಜೆಪಿಯವರು ಲೂಟಿ ಮಾಡುತ್ತಿದ್ದಾರೆ ಎಂದು ಕುಟುಕಿದ್ದಾರೆ.
ಒಂದು ವೇಳೆ ಬಿಜೆಪಿ ಪಕ್ಷದ ಸರ್ಕಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಹತ್ತು ಪರಪ್ಪನ ಅಗ್ರಹಾರದ ಜೈಲು ಕಟ್ಟಿಸಬೇಕಾಗುತ್ತದೆ. ಅಲ್ಲಿ ಲೂಟಿಕೋರ ಬಿಜೆಪಿಯವರನ್ನು ತುಂಬ ಬೇಕಾಗುತ್ತದೆ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ಜೊತೆ ಒಳ ಒಪ್ಪಂದ
ಇನ್ನೂ ಸಮ್ಮಿಶ್ರ ಸರ್ಕಾರ ರಚನೆ ಬಗ್ಗೆಯೂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸ್ವತಂತ್ರವಾಗಿ ಆಡಳಿತ ನಡೆಸಲು ಕಾಂಗ್ರೆಸ್ ನವರು ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡು ಏನೆಲ್ಲಾ ಕಷ್ಟ ಕಾರ್ಪಣ್ಯ ಕೊಟ್ಟರು. ಹೆಜ್ಜೆ ಹೆಜ್ಜೆಗೂ ನನಗೆ ಕಾಂಗ್ರೆಸ್ ನವರು ಮುಳ್ಳಾದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.