ಬೆಂಗಳೂರು : ಲಂಚ ಸ್ವೀಕರಿಸುವಾಗ ಪುತ್ರ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದ ಹಿನ್ನೆಲೆಯಲ್ಲಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದ್ದು, ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.
ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಇದೀಗ ಬಂಧನ ಭೀತಿ ಎದುರಾಗಿದ್ದು, ತಲೆಮರೆಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆಯ ಅಧಿಕಾರಿಗಳು ಶಾಸಕರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ಶಾಸಕರಿಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?
ಪುತ್ರ ಪ್ರಶಾಂತ್ ಮನೆ ಮತ್ತು ಕಚೇರಿಗಳ ಮೇಲೆ ಲೋಕಾ ದಾಳಿ ನಡೆದಿದ್ದು, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನೂ ಆರೋಪಿಯನ್ನಾಗಿ ಮಾಡಲಾಗಿದೆ. ಹೀಗಾಗಿ, ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗೆ ಮೊರೆ ಹೋಗಿದ್ದಾರೆ.
ಇದನ್ನೂ ಓದಿ : ಆ.. ವಿಡಿಯೋ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ
ಲಂಚ ಪ್ರಕರಣವನ್ನು ಈಗಾಗಲೇ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಮುಚ್ಚಿದ ಲಕೋಟೆಯಲ್ಲಿ ಎಫ್ಐಆರ್ ರವಾನಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿರುವ ಶಾಸಕರು, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ತಲೆ ಮರೆಸಿಕೊಳ್ಳಲು ಬಿಟ್ಟಿದ್ದೇಕೆ?
ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಲೆ ಮರೆಸಿಕೊಳ್ಳಲು ಬಿಟ್ಟಿದ್ದೇಕೆ? ಬಿಜೆಪಿ ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷ್ಯ ಬೇಕೆ? ಸಿಎಂ ಬಸವರಾಜ ಬೊಮ್ಮಾಯಿ ಅವರೇ, ನೀವು ಯಾವಾಗ ರಾಜೀನಾಮೆ ಕೊಡುತ್ತೀರಾ? ಎಂದು ಕಿಡಿಕಾರುತ್ತಿದ್ದಾರೆ.