Friday, April 26, 2024

ಚಿತ್ರನಟರು ಯಾಕೆ ಪ್ರಶ್ನೆ ಮಾಡುತ್ತಿಲ್ಲ : ಡಿಕೆಶಿ ಫುಲ್ ಗರಂ

ಬೆಂಗಳೂರು : ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಹಾಗೂ ಮಹಾರಾಷ್ಟ್ರ ವಿವಾದದ ಬಗ್ಗೆ ಧ್ವನಿ ಎತ್ತದ ಚಿತ್ರನಟರ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಫುಲ್ ಗರಂ ಆಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲಾವಿದರು ನಂದಿನಿ ವಿಚಾರವಾಗಿಯೂ ಹೋರಾಟ ಮಾಡುತ್ತಿಲ್ಲ ಹಾಗೂ ಮಹಾರಾಷ್ಟ್ರ ರಾಜ್ಯದ 864 ಹಳ್ಳಿಗೆ ಆರೋಗ್ಯ ವಿಮೆ ಯೋಜನೆಗೆ ಹಣ ನೀಡುತ್ತಿರುವುದರ ಬಗ್ಗೆಯೂ ಮಾತನಾಡುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕಿತ್ತು. ಆದರೆ, ಈ ವಿಚಾರವಾಗಿ ಚಲನಚಿತ್ರ ನಟರಾಗಲಿ, ಸಾಹಿತಿಗಳಾಗಲಿ, ಹೋರಾಟಗಾರರಾಗಲಿ ಯಾರೂ ಮಾತನಾಡುತ್ತಿಲ್ಲ ಎಂದು ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ.

ನೀರಿಗೂ ಹಾಲಿಗೂ ಒಂದೇ ಬೆಲೆ

ನಂದಿನಿ ನಮ್ಮ ಸಂಸ್ಥೆ. ರಾಜ್ಯದಲ್ಲಿ 78 ಲಕ್ಷ ರೈತರು ಹಾಲು ಉತ್ಪಾದನೆ ಅವಲಂಬಿಸಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ನೀರಿಗೂ ಹಾಲಿಗೂ ಒಂದೇ ಬೆಲೆ ಆಗಿದೆ. ರೈತರಿಗೆ ಕೇವಲ 28 ರೂ. ನೀಡಲಾಗುತ್ತಿದೆ. ರೈತರಿಗೆ ಸರಿಯಾದ ಬೆಲೆ ಸಿಗಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ರಾಮನಗರದಲ್ಲಿ 5 ರೂ. ಪ್ರೋತ್ಸಾಹ ಧನ ನೀಡಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸುದೀಪ್ ನಮಗೆ ಬೆಂಬಲಿಸಿರುವುದರಿಂದ ‘ಕಾಂಗ್ರೆಸ್ ಗೆ ನಡುಕ’ ಹುಟ್ಟಿದೆ : ಸಿಎಂ ಬೊಮ್ಮಾಯಿ 

ಬಿಜೆಪಿ ಸರ್ಕಾರ ತೊಲಗಬೇಕು

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತೊಲಗಬೇಕು ಎಂದು ಎಲ್ಲರೂ ಕಾಯುತ್ತಿದ್ದಾರೆ. ಹೀಗಾಗಿ ಎಲ್ಲ ಅಧಿಕಾರಿ ವರ್ಗದವರು, ಸರ್ಕಾರಿ ನೌಕರರಿಗೆ ನಮ್ಮ ಸಾಮಾಜಿಕ ಬದ್ಧತೆ ಗಮನದಲ್ಲಿಟ್ಟುಕೊಂಡು ನಮಗೆ ಬೆಂಬಲ ನೀಡಬೇಕು ಎಂದು ಡಿಕೆಶಿ ಮನವಿ ಮಾಡಿದ್ದಾರೆ.

ಟಿಕೆಟ್ ಬಗ್ಗೆ ಪಕ್ಷದಲ್ಲಿ ಅಸಮಾಧಾನ ಎದ್ದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ನಾವು ಎಲ್ಲರ ಜತೆ ಮಾತನಾಡುತ್ತಿದ್ದೇವೆ. ರಾಜಕಾರಣದಲ್ಲಿ ಆಸೆ ಸಹಜ. ಈ ಸಂದರ್ಭದಲ್ಲಿ ನಾವು ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಿಲ್ಲ. ರಾಜಕೀಯ ಎಂದರೆ ಅಧಿಕಾರ ಹಂಚಿ ಸಹಕಾರ ನೀಡುವುದಾಗಿದೆ. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಧಿಕಾರವನ್ನು ಹಂಚಲಾಗುವುದು. ಈ ಕಾರಣಕ್ಕಾಗಿ ಎಲ್ಲರೂ ಸಮಾಧಾನವಾಗಿ ಇರಬೇಕು ಎಂದು ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES