Friday, May 10, 2024

‘ನಂಗೆ ಫ್ರೀ.. ನಿಂಗೆ ಫ್ರೀ..’ ಅಂದವರು ಈಗ ಷರತ್ತು ಹಾಕ್ತಿದ್ದಾರೆ : ಕುಮಾರಸ್ವಾಮಿ ಕಿಡಿ

ಬೆಂಗಳೂರು : ನಂಗೆ ಫ್ರೀ, ನಿಂಗೆ ಫ್ರೀ ಎಂದವರು ಈಗ ಷರತ್ತುಗಳು ಅನ್ವಯ ಅನ್ನುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ನಡೆಗೆ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ ಎಂದು ಕುಟುಕಿದ್ದಾರೆ.

ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಈಗ ವರಸೆ ಬದಲಿಸಿದ್ದಾರೆ. ಉಚಿತ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ ಆಗುತ್ತವೆ ಎನ್ನುತ್ತಿದ್ದಾರೆ. ಇದ್ಯಾವ ನ್ಯಾಯ ಎಂದು ಹೆಚ್ ಡಿಕೆ ಪ್ರಶ್ನಿಸಿದ್ದಾರೆ.

ನಾವು ಜನರ ಪರ ನಿಲ್ಲುತ್ತೇವೆ

ಗ್ಯಾರಂಟಿಗಳ ಭರವಸೆ ನೀಡಿದ್ದೀರಿ. ಜಾರಿ ಮಾಡಿ ಎಂದು ಜನರು ಕೇಳುತ್ತಿದ್ದಾರೆ. ವಿದ್ಯುತ್ ಬಿಲ್ ಕಟ್ಟುತ್ತಿಲ್ಲ, ಬಸ್ ಟಿಕೆಟ್ ಪಡೆಯಲು ನಿರಾಕರಿಸುತ್ತಿದ್ದಾರೆ. ನುಡಿದಂತೆ ನಡೆಯಬೇಕು, ಮಾತು ತಪ್ಪಿದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ. ನಾವು ಜನರ ಪರ ನಿಲ್ಲುತ್ತೇವೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ : ಈ.. ಸಿಎಂ 5 ವರ್ಷ ಅಧಿಕಾರದಲ್ಲಿ ಇರ್ತಾರಾ ಅನ್ನೋದೇ ಡೌಟು : ಬಿ.ವೈ ವಿಜಯೇಂದ್ರ

ಅವತ್ತು ನಿಮಗೆ ತಲೆ ಇರಲಿಲ್ಲವಾ?

ಹಾದಿ ಬೀದಿಯಲ್ಲಿ ಹೋಗೋರಿಗೆಲ್ಲಾ ಗ್ಯಾರಂಟಿ ಯೋಜನೆ ಕೊಡಕ್ಕಾಗಲ್ಲ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹೇಳಿಕೆಯನ್ನು ಒಪ್ಪಲಾಗದು. ಮೊದಲು ಭಾಷಣ ಏನು ಮಾಡಿದ್ದರಲ್ಲ, ಅವತ್ತು ಭರವಸೆ ಕೊಡಬೇಕಾದಾಗಾ ನಿಮಗೆ ತಲೆ ಇರಲಿಲ್ಲವಾ. ಈಗ ಮತ ಕೊಟ್ಟವರೆಲ್ಲಾ ಹಾದಿಬೀದಿಯವರು ಆಗಿಬಿಟ್ರಾ‌? ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನೀವೇ ವೀರಾವೇಶದಲ್ಲಿ ಮಾತಾಡಿದ್ರಿ?

ನಾನು ಕೊಟ್ಟ ಮಾತು ತಪ್ಪಲ್ಲ, ಮಾತಿಗೆ ತಪ್ಪಿದರೆ ಒಂದು ಕ್ಷಣವೂ ಅಧಿಕಾರದಲ್ಲಿ ಇರಲ್ಲ ಅಂದಿದ್ದಾರೆ ಅವರು. ಅವರೆಲ್ಲ ಮಾಡಿರುವ ಭಾಷಣಗಳನ್ನು ಜನರು ನೋಡಿದ್ದಾರೆ, ಕೇಳಿದ್ದಾರೆ. ಅವತ್ತು ವೀರಾವೇಶದಲ್ಲಿ ಮಾತಾಡಿ ಚಪ್ಪಾಳೆ ಗಿಟ್ಟಿಸಿಕೊಂಡರು. ಒಂದೇ ವಾರದಲ್ಲಿ ಅವರ ನಿಜವಾದ ಬಣ್ಣ ಬಯಲಾಗ್ತಿದೆ ಎಂದು ಛೇಡಿಸಿದ್ದಾರೆ.

RELATED ARTICLES

Related Articles

TRENDING ARTICLES