ಬೆಂಗಳೂರು : ಐದು ಉಚಿತ ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ವರ್ಷ ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಬೇಡಿ ಎಂದು ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ನಿನ್ನೆಯ ಸಭೆಯಲ್ಲಿ ಶಾಸಕರು ಹಾಗೂ ಸಚಿವರ ಸಮಸ್ಯೆಗಳ ಆಲಿಸಿದ ಬಳಿಕ ಪರಿಹಾರಕ್ಕೆ ಕ್ರಮಕೈಗೊಳ್ಳುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಅನೇಕ ಶಾಸಕರು ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು. ಆದರೆ, ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಕನಿಷ್ಠ ಎಂಟು ತಿಂಗಳಾದರೂ ಕಾಯಬೇಕು. ಹಾಗೂ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಸತ್ಯಾಸತ್ಯತೆ ತಿಳಿಯಲು ತನಿಖೆ
ಬಿಬಿಎಂಪಿ ಕಾಮಗಾರಿಗಳ ಸ್ಥಗಿತ, ಗುತ್ತಿಗೆದಾರಿಂದ ರಾಜ್ಯಪಾಲರಿಗೆ ದೂರು ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲಸ ನಿಲ್ಲಿಸಿಲ್ಲ, ತನಿಖೆ ಮಾಡಿಸ್ತಿದ್ದೀವಿ. ಅನೇಕ ದೂರುಗಳು ಬಂದಿವೆ. ಬಿಬಿಎಂಪಿ(BBMP), ಬಿಡಿಎ(BDA) ವ್ಯಾಪ್ತಿಯಲ್ಲಿ ಅನೇಕ ಕೆಲಸಗಳು ಆಗಿವೆ. ಇವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡ್ತಿದ್ದೀವಿ. ಬಾಕಿ ಉಳಿದಿರೋ ಬಿಲ್ ರಿಲೀಸ್ಗೆ ಸಿಎಂ ಭರವಸೆ ನೀಡಿದ್ದಾರೆ.