ಬೆಂಗಳೂರು: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇದನ್ನೂ ಓದಿ: ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸಿಎಂ ಸೂಚನೆ
ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದ ಮುಖ್ಯಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ನೀರಾವರಿಗೆ ಹೆಚ್ಚು ಆದ್ಯತೆ ನೀಡಿ, ಏಕೀಕರಣದ ನಂತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಮಾಡುವ ಇಚ್ಛಾಶಕ್ತಿಯಿಂದ ಅನೇಕ ಯೋಜನೆಗಳನ್ನು ರೂಪಿಸಿದರು.
ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿದ್ದ ಅವರು ತಮ್ಮ ಜೀವನದುದ್ದಕ್ಕೂ ಅದನ್ನು ಕಾಪಾಡಿಕೊಂಡು ಬಂದವರು. ಧೀಮಂತ ನಾಯಕರಾಗಿದ್ದ ಅವರ ಪುಣ್ಯತಿಥಿ ಆಚರಿಸಿ ಗೌರವ ಸಲ್ಲಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅವರ ಬದುಕು ನಮಗೆ ಮಾರ್ಗದರ್ಶನ ನೀಡಲಿ ಎಂದರು. ನಿಜಲಿಂಗಪ್ಪನವರು ಈ ನಾಡಿಗೆ ಹಾಗೂ ದೇಶಕ್ಕೆ ಮಾಡಿದ ಸೇವೆಯನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು.
ಈ ವೇಳೆ ನಿಜಲಿಂಗಪ್ಪ ಕುಟುಂಬಸ್ಥರು, ರಾಜಕೀಯ ಮುಖಂಡರು ಹಾಗು ಅಧಿಕಾರಿಗಳು ಇದ್ದರು.