Saturday, August 23, 2025
Google search engine
HomeUncategorizedಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ: ಬೊಮ್ಮಾಯಿ

ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ: ಬೊಮ್ಮಾಯಿ

ಬೆಂಗಳೂರು: ನಮ್ಮ ಮಕ್ಕಳ ಭವಿಷ್ಯವನ್ನು ಕಡೆಗಣಿಸಿ ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವತ್ತಿನ ಕಾಲಘಟ್ಟಕ್ಕೆ ಅನುಗುಣವಾಗಿ ನೂತನ ಶಿಕ್ಷಣ ನೀತಿಯನ್ನು (ಎನ್‍ಇಪಿ) ರೂಪಿಸಲಾಗಿದೆ. ಎನ್‍ಇಪಿ ಕರಡಿಗೆ ಸಿದ್ದರಾಮಯ್ಯನವರ 2013-18ರ ಅವಧಿಯ ಸರಕಾರ ಒಪ್ಪಿಗೆ ಕೊಟ್ಟಿತ್ತು. ಅದರ ನೇತೃತ್ವವನ್ನು ಕಸ್ತೂರಿರಂಗನ್ ಅವರು ವಹಿಸಿದ್ದರು. ಕರ್ನಾಟಕದ ಶಿಕ್ಷಣ ನೀತಿ ರಚಿಸಿದ್ದ ಕಸ್ತೂರಿರಂಗನ್ ಅವರೇ ಇಡೀ ದೇಶದ ಎನ್‍ಇಪಿ ಮಾಡಿದ್ದಾರೆ ಎಂದು ವಿವರಿಸಿದರು.

ಇದನ್ನೂ ಓದಿ: ಸ್ವಾತಂತ್ರ್ಯ ಬರೋ 12 ದಿನ ಮುಂಚೆ ನಾನು ಹುಟ್ಟಿದ್ದೀನಿ : ಸಿದ್ದರಾಮಯ್ಯ

ಇದು ಮಕ್ಕಳ ಭವಿಷ್ಯದ ಬಗ್ಗೆ ಚೆಲ್ಲಾಟ ಎಂದು ಆಕ್ಷೇಪಿಸಿದರು. ಇಡೀ ದೇಶದಲ್ಲಿ ಇರುವ ವ್ಯವಸ್ಥೆ ನಮ್ಮ ರಾಜ್ಯದಲ್ಲಿ ಇಲ್ಲದಿದ್ದರೆ ನಮ್ಮ ಮಕ್ಕಳು ಪೈಪೋಟಿ ಮಾಡುವುದು ಹೇಗೆ ಎಂದು ಅವರು ಪ್ರಶ್ನಿಸಿದರು. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಬಹಳ ದೊಡ್ಡ ಹಿನ್ನಡೆ ಆಗಲಿದೆ. ಸಿದ್ದರಾಮಯ್ಯನವರು ರಾಜಕೀಯ ಕಾಮಾಲೆ ಕಣ್ಣಿನಿಂದ ನೋಡದೆ ಮಕ್ಕಳ ಉಜ್ವಲ ಭವಿಷ್ಯವನ್ನು ನೋಡಬೇಕು. ಈ ವಿಚಾರವನ್ನು ಪುನರ್ ವಿಮರ್ಶೆ ಮಾಡಬೇಕು. ಇಲ್ಲವಾದರೆ ಪಾಲಕರು, ಶಿಕ್ಷಣ ಸಂಸ್ಥೆಗಳ ಜೊತೆಗೂಡಿ ಬಿಜೆಪಿ ದೊಡ್ಡ ಆಂದೋಲನ ಮಾಡುವುದು ಅನಿವಾರ್ಯವಾಗಲಿದೆ ಎಂದರು.

ಸಿದ್ದರಾಮಯ್ಯನವರು ನಮ್ಮ ಅಧಿಕಾರ ಅವಧಿಯ ಕಾಮಗಾರಿಗಳ ತನಿಖೆ ಮಾಡುವುದಾಗಿ ಹೇಳಿ ಮೂರು ತಿಂಗಳಾಗಿದೆ. ಹಲವು ವರದಿಗಳು ಬಂದಿದ್ದು, ಅದರಲ್ಲಿ ಏನೂ ಇಲ್ಲವೆಂದು ಗೊತ್ತಾಗಿ ಪುನರ್ ತನಿಖೆ ಮಾಡುತ್ತಿದ್ದಾರೆ. ರಾಜಕೀಯಪ್ರೇರಿತ ತನಿಖೆಗಳು ನಡೆಯುತ್ತಿವೆ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲಿ. ತನಿಖೆ ಹೆಸರಿನಲ್ಲಿ ತಿಂಗಳುಗಟ್ಲೆ ಬಾರ್ಗೇನ್ ಮಾಡಲು ಉಪಯೋಗ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಕೇಳಿದರು.

ಬಿಜೆಪಿಗೆ ಮತ ಕೊಡುವವರು ರಾಕ್ಷಸರು ಎಂಬ ಸುರ್ಜೇವಾಲಾರ ಹೇಳಿಕೆ ಅತ್ಯಂತ ಖಂಡನೀಯ. ದೇಶದ ನಾಗರಿಕರಿಗೆ ಮಾಡಿದ ಈ ಅವಮಾನವನ್ನು ಪ್ರತಿಯೊಬ್ಬ ನಾಗರಿಕರೂ ಖಂಡಿಸಬೇಕು. ಕಾಂಗ್ರೆಸ್ ಏನು ಸ್ವಚ್ಛವಾಗಿ ತೊಳೆದ ಮುತ್ತೇ? ಅಲ್ಲಿ ಎಲ್ಲರೂ ಹರಿಶ್ಚಂದ್ರರೇ ಇದ್ದಾರಾ? 75 ವರ್ಷದ ಟ್ರ್ಯಾಕ್ ರೆಕಾರ್ಡ್ ಪರಿಶೀಲಿಸಿದರೆ ಅತ್ಯಂತ ಭ್ರಷ್ಟ, ಜನವಿರೋಧಿ ಸರಕಾರಗಳನ್ನು ನಾವು ನೋಡಿದ್ದೇವೆ. ಎಷ್ಟು ಜನ ಕಾಂಗ್ರೆಸ್ ನಾಯಕರು ಜೈಲಿನಲ್ಲಿದ್ದಾರೆ? ಎಷ್ಟು ಕೇಸುಗಳಿವೆ? ಎಂದು ಪ್ರಶ್ನೆ ಹಾಕಿದರು. ಇವರಿಗೆ ನಾಚಿಕೆ ಆಗಬೇಕು ಎಂದರು. ಇದು ಅಮಾನವೀಯ, ಅಸಾಂವಿಧಾನಿಕ ಮತ್ತು ಅಕ್ಷಮ್ಯ ಅಪರಾಧ ಎಂದು ನುಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments