Friday, October 18, 2024

ಚಂದ್ರಯಾನ-3 ಸಕ್ಸಸ್ : ಪ್ರಕಾಶ್ ರೈ, ಚೇತನ್ ಬಳಿಕ ನಟ ಕಿಶೋರ್ ಎಡವಟ್ಟು

ಬೆಂಗಳೂರು : ಚಂದ್ರಯಾನ-3 ಯಶಸ್ಸಿಗೆ ಸಂತಸ ವ್ಯಕ್ತಪಡಿಸಿರುವ ನಟ ಕಿಶೋರ್ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ನಟ ಕಿಶೋರ್, ಚಂದ್ರಯಾನ-3 ಯಶಸ್ವಿಯಾಗಿದ್ದು ಹೆಮ್ಮೆಯ ಕ್ಷಣ, ಎದೆ ಬೀಗಿದೆ ಎಂದು ಹೇಳಿದ್ದಾರೆ. ಅಲ್ಲದೇ, ದೇಶದ ಭ್ರಷ್ಟ ರಾಜಕಾರಣಿಗಳು ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಚಂದ್ರನ ದಕ್ಷಿಣ ಧ್ರುವದ ಮೇಲೆ ಪ್ರಪಂಚದಲ್ಲೇ ಮೊತ್ತ ಮೊದಲ ಬಾರಿಗೆ ಭಾರತದ ಉಪಗ್ರಹ ಅಡಿಯಿರಿಸಿದೆ. ಹೆಮ್ಮೆಯಿದೆ, ಎದೆ ಬೀಗಿದೆ. ಆದರೆ, ಸಂಭ್ರಮಿಸಲೇ ಎನ್ನುತ್ತಿರುವಂತೆಯೇ ನನ್ನ ಕಣ್ಣ ಮುಂದೆ. ನನ್ನ ದೇಶದ ಕುತಂತ್ರಿ ರಾಜಕಾರಿಣಿಗಳು ನನ್ನ ಮನೆಯ ಹೆಣ್ಣು ಮಕ್ಕಳನ್ನು ಬೀದಿಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿ ಅತ್ಯಾಚಾರ ಮಾಡುತ್ತಿರುವ ಚಿತ್ರ ಬಂದು ನಿಲ್ಲುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಜೀಪು ಹರಿಸಿ ಕೊಲ್ಲುತ್ತಿರುವ ಚಿತ್ರ

ನನ್ನ ರೈತ ಸಹೋದರರ ಮೇಲೆ ಜೀಪು ಹರಿಸಿ ಕೊಲ್ಲುತ್ತಿರುವ ಚಿತ್ರ. ಹಿಂದೂ-ಮುಸ್ಲಿಂ ಮೂಲಭೂತವಾದಿಗಳಿಗೆ ಕುಮ್ಮಕ್ಕು ಕೊಟ್ಟು ದೇಶವನ್ನು ಒಡೆಯುತ್ತಿರುವ ಚಿತ್ರ. ನನ್ನ ಮುಸ್ಲಿಂ, ಕ್ರಿಶ್ಚಿಯನ್ ಸಹೋದರ-ಸಹೋದರಿಯರ ಮನೆ, ಹೊಟ್ಟೆಪಾಡಿನ ಅಂಗಡಿಗಳನ್ನು ಧರ್ಮಾಂಧ ಬುಲ್ಡೊಜರುಗಳು ಪುಡಿ ಪುಡಿ ಮಾಡುತ್ತಿರುವ ಚಿತ್ರ. ರಾಜಕೀಯ ದಾಳಗಳಾಗಿ ಸಾಯುತ್ತಲೇ ಇರುವ ಕಾಶ್ಮೀರದ ಜನತೆಯ ಚಿತ್ರ. ಇಂದಿಗೂ ದಲಿತರ, ಆದಿವಾಸಿಗಳ ಮೇಲೆ ಎಸಗುತ್ತಿರುವ ಹೇಸಿಗೆ ದೌರ್ಜನ್ಯದ ಚಿತ್ರ, ದೇಶದ ಯೋಧರನ್ನು ರಾಜಕಾರಿಣಿಗಳೇ ತಯಾರು ಮಾಡಿದ ಸಾವಿನ ಕೂಪಕ್ಕೆ ತಳ್ಳುವ ಚಿತ್ರ. ಹೀಗೆ, ನೂರಾರು ಚಿತ್ರಗಳು ನನ್ನ ಕಣ್ಣ ಮುಂದೆ ಬರುತ್ತವೆ ಎಂದು ಬರೆದುಕೊಂಡಿದ್ದಾರೆ.

ಮೋದಿಯಂತೆ ನಾನೂ ಸ್ವಾರ್ಥಿ ಆಗಬಾರದಿತ್ತೆ?

ಉಪಗ್ರಹಕ್ಕಿಂತ ಪರದೆಯ ಮೇಲೆ ಹೆಚ್ಚು ರಾರಾಜಿಸಿ ಮೆರೆದ ಪ್ರಧಾನಿಯಂತೆ ನಾನೂ ಕೂಡ ಸ್ವಾರ್ಥಿಯೂ, ಅಸೂಕ್ಷ್ಮಮತಿಯೂ, ಸಂವೇದನಾಹೀನನೂ ಆಗಬಾರದಿತ್ತೆ? ಸಂಬಳವೂ ಇಲ್ಲದೆ ದುಡಿದ ನನ್ನ ದೇಶದ ವಿಜ್ಞಾನಿಗಳ ಬೆವರ ಫಲವನ್ನು ಸಂಭ್ರಮಿಸಲು? ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES