ನವದೆಹಲಿ : ಮಾಜಿ ಸಿಎಂ ಹಾಗೂ ಪುತ್ರ ಹೆಚ್.ಡಿ. ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಶಾಲು ಹಾಕಬಾರದಿತ್ತು, ನಮ್ಮ ಪಕ್ಷದ ಶಾಲು ಹಾಕಬಹುದಿತ್ತು. ಅದಕ್ಕೇನು ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈತ್ರಿ ಬಳಿಕ ಒಂದುಗೂಡಿ ಕೆಲಸ ಮಾಡುತ್ತಿದ್ದೇವೆ. ಆ ವೇಳೆ ಯಾರೋ ಬಂದು ಕೇಸರಿ ಶಾಲು ಹಾಕಿರುತ್ತಾರೆ. ಆಯಾ ಸಂದರ್ಭಕ್ಕೆ ಹಾಕಿರ್ತಾರೆ. ನಾಳೆ ನಾನು ಪ್ರಧಾನಿ ಮೋದಿ ಅವರ ಜೊತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ನಾನು ಖಂಡಿತಾವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದು ಹೇಳಿದ್ದಾರೆ.
ಇಬ್ರು ಸೇರಿ ‘ಕೈ’ ವಿರುದ್ಧ ಹೋರಾಟ ಮಾಡ್ತಿವಿ
ಸೀಟು ಹಂಚಿಕೆ ಬಗ್ಗೆ ನಾನು ಮಾತನಾಡುವುದಿಲ್ಲ. ಕುಮಾರಸ್ವಾಮಿ ಮತ್ತು ಅಮಿತ್ ಶಾ ಚರ್ಚೆ ಮಾಡಲಿದ್ದಾರೆ. ಸೀಟು ಹಂಚಿಕೆ ಏನೇ ಇರಲಿ, ಇಬ್ಬರು ಸೇರಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಸೋಮಣ್ಣರಿಗೆ ರಾಜ್ಯಸಭೆ ಸೀಟು ಕೊಡುತ್ತಾರೆ
ಮಂಡ್ಯದಲ್ಲಿ ಸಂಸದೆ ಸುಮಲತಾ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಲಿ. ಸೀಟು ಹಂಚಿಕೆ ಬಳಿಕ ಗೊತ್ತಾಗುತ್ತದೆ. ಮಾಜಿ ಸಚಿವ ವಿ. ಸೋಮಣ್ಣ ತುಮಕೂರು ಸ್ಪರ್ಧೆ ವಿಚಾರವಾಗಿ ಮಾತನಾಡಿ, ಅವರಿಗೆ ರಾಜ್ಯಸಭೆ ಸೀಟು ಕೊಡುವ ಬಗ್ಗೆ ಅಮಿತ್ ಶಾ ಹೇಳಿದ್ದಾರೆ ಅಂತ ಸೋಮಣ್ಣ ಹೇಳಿದ್ದಾರೆ ಎಂದು ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.