Friday, May 10, 2024

ಮಾಘ ಚೌತಿ : ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಸಂಭ್ರಮಿಸಿದ ‘ಕಾರವಾರಿಗರು’

ಕಾರವಾರ : ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣಪತಿ ಮೂರ್ತಿಗಳನ್ನಿಟ್ಟು ಪೂಜೆ ಮಾಡುವುದು ಸಾಮಾನ್ಯ. ಈಗಾಗಲೇ ಚೌತಿ ಹಬ್ಬ ಮುಗಿದು ಐದಾರು ತಿಂಗಳುಗಳೇ ಕಳೆದಿವೆ. ಮತ್ತೆ ಹಬ್ಬ ಬರಬೇಕು ಅಂದ್ರೆ ಸಾಕಷ್ಟು ತಿಂಗಳುಗಳು ಕಳೆಯಬೇಕು.

ಆದರೆ, ಕರಾವಳಿ ನಗರಿ ಕಾರವಾರದಲ್ಲಿ ಇಂದು ಮನೆಗಳಲ್ಲಿ ಹಾಗೂ ಸಾರ್ವಜನಿಕವಾಗಿ ಸಹ ಗಣಪತಿ ಮೂರ್ತಿಯನ್ನಿಟ್ಟು ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು. ಕಾರವಾರ ನಗರ ಸೇರಿದಂತೆ ಅನೇಕ ಕಡೆಯಲ್ಲಿ ಮಾಘ ಚೌತಿ ಹಿನ್ನೆಲೆ ಕಾರವಾರಿಗರು ಇಂದು ಸಂಭ್ರಮದಿಂದ ಗಣೇಶ ಹಬ್ಬವನ್ನ ಆಚರಿಸಿದರು.

ಗಣಪತಿ ಹುಟ್ಟಿದ ದಿನ ಎಂದೇ ಹೇಳಲಾಗುವ ಮಾಘ ಚೌತಿಯಂದು ಗಣೇಶ ಚತುರ್ಥಿ ಮಾದರಿಯಲ್ಲಿಯೇ ಗಣಪತಿ ಮೂರ್ತಿಯನ್ನಿಟ್ಟು ಪೂಜೆ ಸಲ್ಲಿಸುವ ಸಂಪ್ರದಾಯ ಕಾರವಾರ ತಾಲ್ಲೂಕಿನಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಾಘ ಚೌತಿಯಂದು ಪ್ರತಿಷ್ಠಾಪಿಸುವ ಮೂರ್ತಿಯನ್ನು ಹರಕೆ ಗಣಪತಿ ಎಂದೇ ಹೇಳಲಾಗುತ್ತದೆ.

ಚತುರ್ಥಿ ವೇಳೆಯೂ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಇಷ್ಟಾರ್ಥಗಳ ಈಡೇರಿಕೆಗಾಗಿ ಹರಕೆ ಹೊತ್ತುಕೊಂಡವರು ಹಾಗೂ ಗಣೇಶ ಚತುರ್ಥಿಯ ಸಮಯದಲ್ಲಿ ನಾನಾ ಕಾರಣಗಳಿಂದ ಮೂರ್ತಿ ಪ್ರತಿಷ್ಠಾಪಿಸಲು ಸಾಧ್ಯವಾಗದಿರುವವರೂ ಸಹ ಮಾಘ ಚೌತಿಯಂದು ಗಣಪನ ಮೂರ್ತಿಯನ್ನಿಟ್ಟು ಪೂಜೆ ಮಾಡುತ್ತಾರೆ. ಜೊತೆಗೆ ಚತುರ್ಥಿ ವೇಳೆ ಪ್ರತಿವರ್ಷ ಸತತವಾಗಿ ಮೂರ್ತಿಯನ್ನಿಟ್ಟು ಪೂಜೆ ಮಾಡಲು ಸಾಧ್ಯವಾಗದವರು ಇಂದು ಮನೆ ಮನೆಗಳಲ್ಲಿ ಗಣಪತಿ ಮೂರ್ತಿಯನ್ನಿಟ್ಟು ಪೂಜೆ ಸಲ್ಲಿಸುತ್ತಾರೆ.

RELATED ARTICLES

Related Articles

TRENDING ARTICLES