ಕೋಲಾರ : ನಿಖಿಲ್ ಸ್ಪರ್ಧೆ ಬಗ್ಗೆ ಎಷ್ಟು ಬಾರಿ ಸ್ಪಷ್ಟನೆ ಕೊಡಬೇಕು. ನಿಖಿಲ್ ಸ್ಪರ್ಧೆ ಮಾಡುವುದಿಲ್ಲ, ಅವನೇ ಸ್ಪಷ್ಟನೆ ನೀಡಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಡ್ಡಿ ಮುರಿದಂತೆ ಹೇಳಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಸ್ಪರ್ಧೆ ಮಾಡುವುದು ಅವರಿಗೆ ಬಿಟ್ಟ ವಿಚಾರವಾಗಿದೆ. ಅವರು ದೊಡ್ಡವರು ಇದ್ದಾರೆ. ಅವರ ಬಗ್ಗೆ ಮಾತನಾಡಲಿ ಎಂದು ತಿಳಿಸಿದ್ದಾರೆ.
ರಾತ್ರಿ 1.30ರವರೆಗೂ ಮಂಡ್ಯ ಚುನಾವಣೆ ಬಗ್ಗೆ ಸಭೆ ಮಾಡಿದ್ದೇನೆ. ಈ ಮಧ್ಯೆ ಏನೇನೋ ಬೆಳವಣಿಗೆ ಆಗುತ್ತಿದೆ. ನಮ್ಮದು ಸಣ್ಣ ಪಕ್ಷ, ನಾವು ಏನೂ ಮಾಡಬೇಕೋ ಮಾಡ್ತೀವಿ. ಆದ್ರೆ, ಕಾರ್ಯಕರ್ತರು ಸ್ಪರ್ಧೆ ಮಾಡುವಂತೆ ಒತ್ತಡ ಹಾಕ್ತಿದ್ದಾರೆ. ಚುನಾವಣೆ ಸಮಯದಲ್ಲಿ ನನ್ನ ಸ್ಪರ್ಧೆ ಬಗ್ಗೆ ನೋಡೋಣ ಎಂದು ಹೇಳಿದ್ದಾರೆ.
ನಿಖಿಲ್ ಸ್ಪರ್ಧೆ ಬಗ್ಗೆ ಮಾಹಿತಿ ಇಲ್ಲ
ಮಂಡ್ಯದಿಂದ ನಿಖಿಲ್ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸೂರಜ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ನನಗೆ ಅದರ ಬಗ್ಗೆ ಮಾಹಿತಿಯಿಲ್ಲ, ನನಗೇನು ಗೊತ್ತಿಲ್ಲ. ಗೊತ್ತಿದ್ದರೆ ನಾನು ಹೇಳುತ್ತಿದ್ದೆ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು
ನಮ್ಮ ಜಿಲ್ಲೆ ಬಿಟ್ಟು ಹೊರಗಡೆ ಜಿಲ್ಲೆ ಬಗ್ಗೆ ನನಗೆ ಮಾಹಿತಿಯಿಲ್ಲ. ಮಾಹಿತಿ ಇದ್ದಿದ್ದರೆ, ನಾನು ಹೇಳುತ್ತಿದ್ದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಬೇಕು. ನಮ್ಮ ಎಲ್ಲಾ ಕಾರ್ಯಕರ್ತರಿಗೂ ಅವರು ಸ್ಪೂರ್ತಿ, ಶಕ್ತಿ. ಅವರು ಸ್ಪರ್ಧೆ ಮಾಡಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ.