ವಿಜಯಪುರ : ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬೆಂಬಲಿಗರ ಮೇಲೆ ಕೂಡಲೇ ಪೊಲೀಸರು ದೇಶ ದ್ರೋಹ ಪ್ರಕರಣವನ್ನು ದಾಖಲಿಸಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷದ ರಾಜ್ಯ ಸಭಾ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ರಾಜ್ಯ ಸಭೆಯ ಮತದಾನ ಆಗುತ್ತಿದ್ದಂತೆ, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ಕಾಂಗ್ರೆಸ್ ಪಕ್ಷದ ನಿಲುವೇನು ಎಂದು ಸಾಬೀತಾಗುತ್ತದೆ ಎಂದು ಕುಟುಕಿದ್ದಾರೆ.
ಅಖಂಡ ಭಾರತವನ್ನು ಒಡೆಯಲು ಯತ್ನಿಸುವ ಶಕ್ತಿಗಳನ್ನು ಪೊಲೀಸರು ಹತ್ತಿಕ್ಕಬೇಕು. ಇವರ ಪರವಾಗಿ ಯಾವುದೇ ನ್ಯಾಯವಾದಿಗಳು ನ್ಯಾಯಾಲಯದಲ್ಲಿ ವಕಾಲತ್ತು ಮಾಡಬಾರದು. Nation First, Party next, Self last in letter, spirit and practice ಅನ್ನುವುದು ಪ್ರತಿಯೊಬ್ಬ ಪ್ರಜೆಯ ಧ್ಯೇಯವಾಗಿರಬೇಕು ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಹೀಗಾಗಿ, ಕೈ ಕಾರ್ಯಕರ್ತರು ವಿಧಾನಸೌಧದಲ್ಲಿ ವಿಜಯೋತ್ಸವ ಆಚರಿಸಿದ್ದಾರೆ. ರಾಜ್ಯಸಭೆ ಚುಣಾವಣೆಯಲ್ಲಿ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್ ಕೂಡ ವಿಜೇತರಾಗಿದ್ದಾರೆ. ಈ ಹಿನ್ನೆಲೆ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ದೇಶದ್ರೋಹಿ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದ್ದಾರೆ.