ಬೆಂಗಳೂರು : ಸದನದಲ್ಲಿ ದುರ್ವರ್ತನೆ ಹಿನ್ನೆಲೆ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯ 15 ಶಾಸಕರನ್ನು ಅಮಾನತು ಮಾಡಲಾಗಿದೆ.
ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್ ಸೇರಿ 15 ಮಂದಿ ಬಿಜೆಪಿ ಶಾಸಕರನ್ನು ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಸಭಾಧ್ಯಕ್ಷ ಕುಲದೀಪ್ ಸಿಂಗ್ ಅವರು ಅಮಾನತು ಮಾಡಿದ್ದಾರೆ. ಬಳಿಕ, ಸದನದ ಕಲಾಪವನ್ನು ಮುಂದೂಡಿದ್ದಾರೆ.
ಸದನದಲ್ಲಿ ದುರ್ವರ್ತನೆ ಮತ್ತು ಘೋಷಣೆ ಕೂಗಿದ್ದಕ್ಕಾಗಿ ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಅನ್ನು ಅಂಗೀಕರಿಸಲು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸಬಹುದು ಎಂದು ನಾವು ಆತಂಕಗೊಂಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್ ತಿಳಿಸಿದ್ದರು.
ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ಬಹುಮತ ಇಲ್ಲ ಎಂಬುದು ರಾಜ್ಯಸಭೆ ಚುನಾವಣೆಯಲ್ಲಿ ಸಾಬೀತಾಗಿದೆ. ಹಾಗಾಗಿ, ಮುಖ್ಯಮಂತ್ರಿ ಸುಖೀಂದರ್ ಸಿಂಗ್ ಸುಖು ರಾಜೀನಾಮೆಗೆ ಒತ್ತಾಯಿಸಿದ್ದರು.