ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾರನ್ನು ಮೆಚ್ಚಿಸಲು ಆತುರವಾಗಿ ಜಾತಿಗಣತಿ ವರದಿಯನ್ನು ಪಡೆಯುತ್ತಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಾಳೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಜಾತಿಗಣತಿಯ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ಈಗ ಕಾಂಗ್ರೆಸ್ ನಾಯಕರು ಅವರ ನಿಲುವನ್ನು ಸ್ಪಷ್ಟಪಡಿಸಲಿ ಎಂದು ಕುಟುಕಿದ್ದಾರೆ.
ಈಗಾಗಲೇ ಕಾಂಗ್ರೆಸ್ ನಾಯಕರನ್ನೂ ಸೇರಿದಂತೆ ಎಲ್ಲರೂ ಈ ಅವೈಜ್ಞಾನಿಕ ವರದಿಯನ್ನು ಸರ್ಕಾರ ಸ್ವೀಕಾರ ಮಾಡಬಾರದೆಂದು ತಾಕೀತು ಮಾಡಿದ್ದಾರೆ. ಹೀಗಿದ್ದರೂ ಸಿದ್ದರಾಮಯ್ಯನವರು ಯಾರನ್ನು ಮೆಚ್ಚಿಸಲು ವರದಿಯನ್ನು ಸ್ವೀಕರಿಸುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಛೇಡಿಸಿದ್ದಾರೆ.
ನಕಲು ಪ್ರತಿ ಸ್ವೀಕಾರ ಯಾವ ಪುರುಷಾರ್ಥಕ್ಕೆ?
ಈ ಜಾತಿಗಣತಿ ವರದಿಯ ಮೂಲ ಪ್ರತಿಯೇ ಕಳೆದುಹೋಗಿದೆ. ಆದರೂ ನಕಲು ಪ್ರತಿಯನ್ನು ತರಾತುರಿಯಲ್ಲಿ ಅಂಗೀಕರಿಸಲು ರಾಜ್ಯ ಸರ್ಕಾರ ಯಾವ ಪುರುಷಾರ್ಥಕ್ಕಾಗಿ ಮುಂದಾಗಿರುವುದು? ಎಂದು ಶಾಸಕ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ನಾಳೆ ಬೆಳಗ್ಗೆ 11ಕ್ಕೆ ಸಿಎಂಗೆ ವರದಿ ಪ್ರತಿ ಸಲ್ಲಿಕೆ
ನಾಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅಧಿಕೃತವಾಗಿ ಜಾತಿಗಣತಿ ವರದಿಯ ಪ್ರತಿಯನ್ನು ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು (ಫೆ. 28) ಸಂಜೆ ಸಿಎಂ ಸಿದ್ದರಾಮಯ್ಯ ಅವರು ಜಯಪ್ರಕಾಶ್ ಹೆಗಡೆ ಅವರ ಜೊತೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಫೆ.29ರಂದು (ನಾಳೆ) ಬೆಳಗ್ಗೆ ಸುಮಾರು 11 ಗಂಟೆಗೆ ವರದಿ ಪ್ರತಿಯನ್ನು ಸಿದ್ದರಾಮಯ್ಯನವರಿಗೆ ಸಲ್ಲಿಸಲಿದ್ದಾರೆ.
ನಾಳೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಜಾತಿ ಗಣತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ.
ಈಗಾಗಲೇ ಕಾಂಗ್ರೆಸ್ ನಾಯಕರನ್ನೂ ಸೇರಿದಂತೆ ಎಲ್ಲರೂ ಈ ಅವೈಜ್ಞಾನಿಕ ವರದಿಯನ್ನು ಸರ್ಕಾರ ಸ್ವೀಕಾರ ಮಾಡಬಾರದೆಂದು ತಾಕೀತು ಮಾಡಿದ್ದರೂ ಸಿದ್ದರಾಮಯ್ಯನವರು ಯಾರನ್ನು ಮೆಚ್ಚಿಸಲು ಆತುರವಾಗಿ ಈ ವರದಿಯನ್ನು ಪಡೆಯುತ್ತಿದ್ದಾರೆ ಎಂಬುದನ್ನು…
— Basanagouda R Patil (Yatnal) (@BasanagoudaBJP) February 28, 2024