ಹಾಸನ : ಮುಂಬರುವ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುತ್ತಾ? ಎಂಬ ವಿಚಾರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಹಾಸನದ ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಐದು ವರ್ಷ ಪೂರೈಸುತ್ತಾರೆ ಎಂಬುದು ನನ್ನ ನಂಬಿಕೆ ಎಂದು ತಂದೆ ಪರ ಬ್ಯಾಟ್ ಬೀಸಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಅನ್ನೋದೆಲ್ಲ ಊಹಾಪೋಹಗಳು. ಆ ರೀತಿ ಏನು ಇಲ್ಲ. ನಮ್ಮ ಸರ್ಕಾರ ಐದು ವರ್ಷಗಳು ಕೂಡ ತನ್ನ ಅವಧಿಯನ್ನು ಪೂರೈಸುತ್ತದೆ. ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎನ್ನುವುದು ನನ್ನ ನಂಬಿಕೆ ಎಂದು ಪುನರುಚ್ಚರಿಸಿದ್ದಾರೆ.
ಎಷ್ಟೋ ಜನ ಮುಖ್ಯಮಂತ್ರಿ ಆಕಾಂಕ್ಷಿಗಳಿದ್ದರು
ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ಎಂಬ ಕೆಲ ಶಾಸಕರ ಹೇಳಿಕೆ ವಿಚಾರವಾಗಿ ಮಾತನಾಡಿ, ಎಲ್ಲಾ ಸರ್ಕಾರ ಇದ್ದಾಗಲೂ ಕೂಡ ಆ ರೀತಿ ಇದ್ದೇ ಇರುತ್ತದೆ. ಬಿಜೆಪಿ ಸರ್ಕಾರ ಇದ್ದಾಗ ಎಷ್ಟೋ ಜನ ಮುಖ್ಯಮಂತ್ರಿ ಆಕಾಂಕ್ಷಿಗಳಿದ್ದರು. ಅವರ ಬೆಂಬಲಿಗರು ಕೂಡ ಮಾತನಾಡಿದ್ದರು. ಒಂದು ಸ್ಥಿರವಾದ ಸರ್ಕಾರ ಕೊಡಬೇಕಿರುವುದು ಎಲ್ಲಾ ಪಕ್ಷಗಳ ಜವಾಬ್ದಾರಿ. ನಮ್ಮ ಕಾಂಗ್ರೆಸ್ ಪಕ್ಷ ಕೂಡ ಅದಕ್ಕೆ ಬದ್ಧವಾಗಿರುತ್ತದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.