ಶಿರಸಿ : ಅನಂತಕುಮಾರ ಹೆಗ್ಗಡೆಯವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರು ಮುಖ್ಯಮಂತ್ರಿಗಳನ್ನು ಅಗೌರವದಿಂದ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿರುವವರು ಈ ರೀತಿ ಮಾತನಾಡುವುದಿಲ್ಲ. ಜನವಿರೋಧಿಯಾಗಿರುವವರು ಮಾತ್ರ ಈ ರೀತಿ ಮಾತನಾಡುತ್ತಾರೆ. ಅವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನನಗೆ ಯಾವುದೇ ಬೆದರಿಕೆ ಬಂದಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎ ಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎ ಯವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದರು.
ಇದನ್ನೂ ಓದಿ: ಮೋದಿ ಬಗ್ಗೆ ಮಾತನಾಡಲು ನೀವು ಯಾರು? ಸಿದ್ದು ವಿರುದ್ಧ ದೇವೇಗೌಡ ಟೀಕಾಪ್ರಹಾರ
ಪಾಕ್ ಪರ ಘೋಷಣೆ ಪ್ರಕರಣದ ಎಫ್ ಎಸ್ ಎಲ್ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿಳಿಸುತ್ತಿಲ್ಲ ಎಂಬ ಬಿಜೆಪಿಯವರ ಟೀಕೆಗೆ ಉತ್ತರಿಸುತ್ತಾ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆಗಳನ್ನು ಕೂಗಿದ್ದರು. ಆಗ ಆ ಸರ್ಕಾರ ಪ್ರಕರಣವನ್ನೇ ವಜಾಗೊಳಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಇದರಿಂದ ಯಾರು ದೇಶದ್ರೋಹಿಗಳು ಎಂದು ತಿಳಿಯುತ್ತದೆ ಎಂದರು.
ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಶೀಘ್ರ:
ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಘೋಷಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ. ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಎಂದರು.
ಜಿಲ್ಲೆಗೆ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆಯಿದ್ದು, ಈ ಬಗ್ಗೆ ಆಯವ್ಯಯದಲ್ಲಿ ಪ್ರಸ್ತಾಪವಿಲ್ಲದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.