ಮಲ್ಪೆ: ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಗರಡಿ ಮಜಲು ನಿವಾಸಿ ದಿವಾಕರ್ ಕೋಟ್ಯಾನ್ ಟೀಕಿಸಿದ್ದಾರೆ.
ಅಲ್ಲದೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿ ವಿಡಿಯೋ ಹರಿಬಿಟ್ಟಿದ್ದು, ಈ ಸಂಬಂಧ ದಿವಾಕರ್ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿವಾಕರ್ ಕೋಟ್ಯಾನ್ ಸ್ವತಃ ತಾವೇ ಮಾಡಿರುವ ವಿಡಿಯೋದಲ್ಲಿ, ಬಸ್ ಟಿಕೆಟ್, 2,000 ರೂ., ವಿದ್ಯುತ್ ಫ್ರೀ. ಜೊತೆಗೆ ಈಗ ಹೊಸದಾಗಿ ಬಾಂಬ್ ಸ್ಪೋಟ ಫ್ರೀ ಕೂಡ ರಾಜ್ಯ ಸರ್ಕಾರ ಕೊಡುತ್ತಿದೆ. ಇದಕ್ಕೂ ಏನು ಹಣ ಕೊಡಲು ಇಲ್ಲ ಎಂದು ಲೇವಡಿ ಮಾಡಿದ್ದರು.
ಇನ್ಮುಂದೆ ಎಲ್ಲವೂ ಉಚಿತ. ನೋ ಪಾಸ್ ಪೋಟ್ ನೋ ವೀಸಾ. ಸನ್ಮಾನ್ಯ ಮುಖ್ಯಮಂತ್ರಿ ಸಿದ್ರುಲ್ಲಾ ಖಾನ್… ಹಿಂದುಗಳೇ ಫ್ರೀ ಬೇಕಲ್ಲ ತೆಗೆದುಕೊಳ್ಳಿ. ಮುಂದೆ ಇನ್ನು ಆರಾರು ತಿಂಗಳಿಗೆ ಬಸ್, ವಿದ್ಯುತ್, 2,000 ರೂ. ಜೊತೆ ಬಾಂಬ್ ಕೂಡ ಫ್ರೀ ಸಿಗುತ್ತದೆ. ಮಜಾ ಮಾಡಿ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಗಿದೆ. ದಿವಾಕರ್ ಕೋಟ್ಯಾನ್ ರಾಜ್ಯ ಸರ್ಕಾರದ ಗ್ಯಾರಂಟಿ ಜೊತೆ ಬಾಂಬ್ ಉಚಿತ ಹೇಳುವುದರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಮ್ಮದ್ ಉಡುಪಿ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.