ಬೀದರ್ : ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ನಾಳೆ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ಆಗಮಿಸಲಿದ್ದಾರೆ.
ನಾಳೆ ಬೆಳಗ್ಗೆ 1೦ ಗಂಟೆಗೆ ಬೆಳಗಾವಿಯಿಂದ ಹೊರಟು, 11 ಗಂಟೆಗೆ ಬೀದರ್ ಏರ್ಪೋರ್ಟ್ಗೆ ಬಂದಿಳಿಯಲಿದ್ದಾರೆ. ಬಳಿಕ 11.15ಕ್ಕೆ ಹೆಲಿಪ್ಯಾಡ್ ಮೂಲಕ ಬಸವಕಲ್ಯಾಣಕ್ಕೆ ತೆರಳಿ, ನೂತನ ಅನುಭವ ಮಂಟಪ ಕಾಮಗಾರಿ ಹಾಗೂ ದಾಸೋಹ ಸ್ಥಳವನ್ನು ವೀಕ್ಷಣೆ ಮಾಡಲಿದ್ದಾರೆ.
ಬಳಿಕ ರಸ್ತೆ ಮೂಲಕ ಥೇರ್ ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಬಸವ ಭಕ್ತರು ಹಾಗೂ ಅನುಭವ ಮಂಟಪ ಸಮಿತಿಯಿಂದ ಆಯೋಜಿಸಿರುವ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಮುಕ್ತಾಯದ ಬಳಿಕ ಬಸವಕಲ್ಯಾಣದಿಂದ ಹೆಲಿಪ್ಯಾಡ್ ಮೂಲಕ ಬೀದರ್ ಏರ್ಪೋರ್ಟ್ಗೆ ಆಗಮಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಕಾರ್ಯಕ್ರಮದಲ್ಲಿ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಶರಣಪ್ರಕಾಶ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಕೆಕೆಆರ್ಡಿಬಿ ಅಧ್ಯಕ್ಷ ಅಜಯ್ ಸಿಂಗ್ ಸೇರಿದಂತೆ ಹಲವು ನಾಯಕರು ಹಾಗೂ ವಿವಿಧ ಮಠಾದೀಶರು ಭಾಗಿಯಾಗಲಿದ್ದಾರೆ.