ಚೆನ್ನೈ : ತಮಿಳುನಾಡಿನಲ್ಲಿ ಕುಟುಂಬ ರಾಜಕಾರಣ ಇರುವುದು ನಿಜ. ಆದರೆ, ನಮ್ಮ ಕುಟುಂಬ ರಾಜ್ಯದ ಪ್ರತಿಯೊಬ್ಬರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರು ತಮಿಳುನಾಡಿನಲ್ಲಿ ಡಿಎಂಕೆ ಕುಟುಂಬ ರಾಜಕಾರಣ ನಡೆಸುತ್ತಿದೆ ಎಂದು ಹೇಳುತ್ತಾರೆ. ಹೌದು, ನಮ್ಮದು ಕುಟುಂಬ ರಾಜಕಾರಣವೇ ಎಂದು ತಿಳಿಸಿದ್ದಾರೆ.
ಪರಿಹಾರ ಪಡೆದಿದ್ದರೆ ಸಾಬೀತುಪಡಿಸಲಿ
ಕೇಂದ್ರ ಸರ್ಕಾರದ ಹಣ ನೇರವಾಗಿ ರಾಜ್ಯದ ಜನತೆಗೆ ತಲುಪುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ, ಪ್ರವಾಹ ಸಂತ್ರಸ್ತರಿಗೆ ಕೇಂದ್ರದಿಂದ ಒಂದು ರೂಪಾಯಿಯೂ ಸಿಕ್ಕಿಲ್ಲ. ಕೇಂದ್ರ ಸರ್ಕಾರದಿಂದ ಯಾರಾದರೂ ಪರಿಹಾರ ಪಡೆದಿದ್ದರೆ ಸಾಬೀತುಪಡಿಸಲಿ ಎಂದು ಸವಾಲ್ ಹಾಕಿದ್ದಾರೆ.
ಮೋದಿ ಕನಿಷ್ಠ 1 ರೂ. ಕೂಡ ಕೊಡಲಿಲ್ಲ
ಚೆನ್ನೈ, ತೂತುಕುಡಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಅಪಾರ ನಷ್ಟ ಸಂಭವಿಸಿತ್ತು. 37,000 ಕೋಟಿ ರೂಪಾಯಿ ಪರಿಹಾರ ನೀಡುವಂತೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆದರೆ, ಪ್ರಧಾನಿ ಮೋದಿಯವರು ಕನಿಷ್ಠ 1 ರೂಪಾಯಿ ಕೂಡ ಕೊಡಲಿಲ್ಲ. ನಮ್ಮ ಸರ್ಕಾರ ಜನರ ಕಲ್ಯಾಣಕ್ಕಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 3,406 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.