ಬೆಂಗಳೂರು: ಮಹಿಳೆ ದಿನಾಚರಣೆಯಂದು ಭಾರತ ಸರ್ಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಿದೆ.
ರಾಜ್ಯಸಭಾ ಸದಸ್ಯರಾಗಿ ಸುಧಾಮೂರ್ತಿ (73) ಅವರನ್ನು ನಾಮ ನಿರ್ದೇಶನ ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾಪಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ನರೇಂದ್ರ ಮೋದಿ, “ಭಾರತದ ರಾಷ್ಟ್ರಪತಿಗಳು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ” ಎಂದು ಹೇಳಿದ್ದಾರೆ.
‘ಸಮಾಜಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಲಿದೆ. ಅವರ ಸಂಸದೀಯ ಅಧಿಕಾರಾವಧಿಗೆ ಹಾರೈಸುತ್ತೇನೆ” ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
I am delighted that the President of India has nominated @SmtSudhaMurty Ji to the Rajya Sabha. Sudha Ji's contributions to diverse fields including social work, philanthropy and education have been immense and inspiring. Her presence in the Rajya Sabha is a powerful testament to… pic.twitter.com/lL2b0nVZ8F
— Narendra Modi (@narendramodi) March 8, 2024
ಲೇಖಕರು, ವಿವಿಧ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿರುವ ಸುಧಾಮೂರ್ತಿ ಅವರು ರಾಜಕೀಯಕ್ಕೆ ಬರಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು. ಮಹಿಳಾ ದಿನಾಚರಣೆ ದಿನವೇ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಸುಧಾಮೂರ್ತಿ ಪುತ್ರಿ ಅಕ್ಷತಾ ಮೂರ್ತಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪತ್ನಿ. ರಿಷಿ ಸುನಕ್ ಮತ್ತು ಅಕ್ಷತಾ ಮೂರ್ತಿ ಈಗಾಗಲೇ ವಿದೇಶದಲ್ಲಿ ರಾಜಕೀಯದಲ್ಲಿದ್ದಾರೆ. ಈಗ ಸುಧಾಮೂರ್ತಿ ಅವರನ್ನು ಭಾರತದಲ್ಲಿ ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.