ಮೈಸೂರು : ತಾಯಿ ಚಾಮುಂಡಿ ನನ್ನ ಕೈ ಬಿಡಲ್ಲ. ಈ ಬಾರಿಯೂ ನಾನು 2 ರಿಂದ 3 ಲಕ್ಷ ಮತಗಳಿಂದ ಗೆಲ್ಲುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಹಾಗೂ ಕೊಡಗು ಜನರು ನನ್ನ ಕೈ ಹಿಡಿಯುತ್ತಾರೆ. ಕೆಲಸವೇ ನನಗೆ ಶ್ರೀರಕ್ಷೆ ಎಂದು ಹೇಳಿದರು.
ಸಂಸದರ ಟಿಕೆಟ್ ನಿರ್ಧಾರ ಮಾಡೋದು ಜನ. ರಾಜ್ಯದಲ್ಲಿ 28 ಮಂದಿ ಸಂಸದರು ಇದ್ದಾರೆ. ಪರ್ಫಾಮ್ ನೋಡಿ ಟಿಕೆಟ್ ನೀಡುತ್ತಾರೆ. ಜನ ಖುಷಿಯಾಗಿದ್ದಾರೆ ಅಂದ್ರೆ ಮೇಲಿನವರು ಅದೇ ನಿರ್ಧಾರ ಮಾಡ್ತಾರೆ. ಮೈಸೂರಿನಲ್ಲಿ ನಾನು ಇಂತ ಕೆಲಸ ಮಾಡಿಲ್ಲ ಎಂದು ಹೇಳಲಿ. ಯಾರೋ ಒಂದಷ್ಟು ಜನ ಅಸೂಯೆಗೆ ಮಾತನಾಡುತ್ತಾರೆ. ಕಾಯಲು ಬೆಟ್ಟದ ಮೇಲೆ ಒಬ್ಬಳು ತಾಯಿ ಇದ್ದಾಳೆ ಎಂದು ತಿಳಿಸಿದರು.
ಹಿಂದುತ್ವದ ಪರ ನಾನು ಕೆಲಸ ಮಾಡಿದ್ದೇನೆ
ಮೈಸೂರಿನಲ್ಲಿ ಯಾರೂ ಮಾಡಿರದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಗ್ರೇಟರ್ ಮೈಸೂರು ಮಾಡಲು ನಾನು ಹೊರಟಿದ್ದೇನೆ. ಹಲವು ಅಭಿವೃದ್ಧಿ ಯೋಜನೆಗಳನ್ನು ನಾನು ಮಾಡಿದ್ದೇನೆ. ಹಿಂದುತ್ವದ ಪರ ನಾನು ಕೆಲಸ ಮಾಡಿದ್ದೇನೆ. ಕರ್ನಾಟಕ ಆಳಿದವರಿಂದಲೂ ಔಟರ್ ರಿಂಗ್ರೋಡ್ ತರಲು ಆಗಿಲ್ಲ. ನಾನು ರಾಜ್ಯದಲ್ಲಿ ಮೊದಲಾಗಿ ಮೈಸೂರಿಗೆ ಮೊದಲ ಪೆರಿಪೆರಲ್ ರಿಂಗ್ ರೋಡ್ ತರಲು ಹೊರಟಿದ್ದೇನೆ.