ಬೆಂಗಳೂರು: ಜನರ ತರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶವನ್ನು ಮಾಡುತ್ತಿರುವ ಲಜ್ಜೆಗೇಡು ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು,ರಾಜ್ಯ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ಹನಿ ನೀರಿಗೂ ತತ್ವಾರ,ಜನ ಜಾನುವಾರುಗಳ ಹಾಹಾಕಾರವಿರುವಂತಹ ಪರಿಸ್ಥಿತಿ ಇದ್ದರೂ ಕಾಂಗ್ರೆಸ್ ಸರಕಾರ ಕೋಟಿ ಕೋಟಿ ರೂಪಾಯಿಗಳನ್ನು ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ ಇದು ಎಂತಹ ಲಜ್ಜೆಗೇಡು ಸರ್ಕಾರ ಎಂದು ಕಿಡಿಕಾರಿದ್ದರು.
ಒಂದು ವರ್ಷದಿಂದ ನಿಮ್ಮ ಇಡೀ ಸರಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂಗಳ ಏಜೆನ್ಸಿಗಳ ಮೂಲಕ ‘ಜಾಹೀರಾತು ಜಾತ್ರೆ’ಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರದ ತೆವಲಿಗೆ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲವೇ..? ಎಂದು ಪ್ರಶ್ನೆ ಮಾಡಿದ್ದಾರೆ.
ಈ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ಸುರಿದಿದ್ದಿರಿ ಸಿದ್ದರಾಮಯ್ಯನವರೇ? ಜನರ ಮುಂದೆ ಲೆಕ್ಕ ಇಡಿ. ಬೇಕಾದರೆ ‘ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ’ ಹೊರಡಿಸಿ. ನಿಮ್ಮ ಸರಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.