ಬೆಂಗಳೂರು : ಬೆಂಗಳೂರು ನಗರ್ತಪೇಟೆಯಲ್ಲಿ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನಲೆ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ ಸೇರಿ 44 ಜನರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.
ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಭಜಂತ್ರಿ ದೂರು ಆಧರಿಸಿ ಐಪಿಸಿ ಸೆಕ್ಷನ್ 143, 268ರಡಿ ಎಫ್ಐಆರ್ ದಾಖಲಿಸಲಾಗಿದೆ. ಚುನಾವಣೆ ಸಮಯದಲ್ಲೇ ಬಿಜೆಪಿ ನಾಯಕರಿಗೆ ಹೊಸ ಸಂಕಷ್ಟ ಎದುರಾಗಿದೆ.
ಹೈಕೋರ್ಟ್ ಆದೇಶದಂತೆ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುವಂತಿಲ್ಲ. ಆದರೂ, ಸಹ ಮುಖೇಶ್ ಹಲ್ಲೆ ಸಂಬಂಧ ಪ್ರತಿಭಟನೆ ಮಾಡಲಾಗಿತ್ತು. ಬೆಂಗಳೂರಿನ ನಗರ್ತ ಪೇಟೆಯಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಪ್ರಕರಣ ರಾಜಕೀಯ ಸ್ವರೂಪಕ್ಕೆ ತಿರುಗಿದೆ.
ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ ನಡೆಸಿದ್ದರು. ಬಳಿಕ ನಗರ್ತಪೇಟೆಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ ಭೇಟಿ ನೀಡಿದ್ದು, ಈ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿತ್ತು.