ಹುಬ್ಬಳ್ಳಿ : ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಸಿಗುವ ವಿಶ್ವಾಸವಿತ್ತು. ಟಿಕೆಟ್ ನೀಡುವ ಮೂಲಕ ಹೆಚ್ಚಿನ ಸೇವೆ ಮಾಡಲು ಅವಕಾಶ ನೀಡಿದ್ದಾರೆ. ಖಂಡಿತವಾಗಿಯೂ ನಾನು ಗೆಲ್ಲುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂತಸ ವ್ಯಕ್ತಪಡಿಸಿದರು.
ಟಿಕೆಟ್ ಘೋಷಣೆ ಬಳಿಕ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಜೆ.ಪಿ ನಡ್ಡಾ, ಅಮಿತ್ ಶಾ, ಪ್ರಧಾನಿ ಮೋದಿ, ಯಡಿಯೂರಪ್ಪ ಹಾಗೂ ವಿಜಯೆಂದ್ರ ಅವರಿಗೆ ಧನ್ಯವಾದಗಳನ್ನು ತಿಳಿಸುವೆ. ವಿಶೇಷವಾಗಿ ಸ್ಥಳೀಯ ನಾಯಕರಿಗೆ ಧನ್ಯವಾದಗಳು, ಅವರ ನಂಬಿಕೆ ಉಳಿಸಿಕೊಳ್ಳಲು ಪ್ರಯತ್ನ ಮಾಡುವೆ ಎಂದರು.
ಸುರೇಶ್ ಅಂಗಡಿ ಅವರು ರೈಲ್ವೆ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗುವೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲರನ್ನೂ ಕೂಡಿಸಿಕೊಂಡು ಬೆಳಗಾವಿ ಅಭಿವೃದ್ಧಿ ಮಾಡಬೇಕಿದೆ. ನನಗೆ ಇನ್ನೂ ಹುಮ್ಮಸ್ಸು ಬಂದಿದೆ. ಎಲ್ಲರ ಜೊತೆಗೂಡಿ ಚುನಾವಣಾ ಎದುರಿಸುವೆ. ನಾನು ಬೆಳಗಾವಿ ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ತಿಳಿಸಿದರು.
ಯಾವುದೇ ಪದವಿಗೆ, ಸಚಿವ ಸ್ಥಾನಕ್ಕೆ ಆಸೆ ಪಡಲ್ಲ
ಹಣದ ಮೇಲೆ ಚುನಾವಣೆ ನಡೆಯುವುದಿಲ್ಲ. ಇದು ರಾಷ್ಟ್ರೀಯ ಚುನಾವಣೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಯಾವುದೇ ವಿರುದ್ಧ ವಾತಾವರಣ ಇದ್ದರೂ ಅದನ್ನು ಶಮನ ಮಾಡುವೆ. ಲೋಕಸಭಾ ಚುನಾವಣೆ ಹೊಸದಿರಬಹುದು. ಆದರೆ, ಅಪಾರ ರಾಜಕೀಯ ಅನುಭವ ಇದೆ. ಯಾವುದೇ ಪದವಿಗೆ, ಸಚಿವ ಸ್ಥಾನಕ್ಕೆ ಆಸೆ ಪಡುವುದಿಲ್ಲ. ತಾನಾಗಿಯೇ ಒಲಿದು ಬರಬೇಕು ಎಂದು ಜಗದೀಶ್ ಶೆಟ್ಟರ್ ಹೇಳಿದರು.