ಬೆಂಗಳೂರು: ಯಾವುದೇ ಕ್ಷಣದಲ್ಲಿ ಕಾಂಗ್ರೆಸ್ ಸರ್ಕಾರ ಪತನ ಆಗಬಹುದು ಎಂದು ಜಗದೀಶ್ ಶೆಟ್ಟರ್ ಭವಿಷ್ಯ ನುಡಿದ್ದಾರೆ.
ಸುದ್ದಿಗೋಷ್ಠಿ ಮಾತನಾಡಿದ ಅವರು,ಬಂಡಾಯ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ.ಯಾವುದೇ ಕ್ಷಣದಲ್ಲಿ ಈ ಕಾಂಗ್ರೆಸ್ ಸರ್ಕಾರ ಪತನವಾಗಬಹುದು ಎಂದು ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಭವಿಷ್ಯ ನುಡಿದರು.
ಲೋಕಸಭಾ ಚುನಾವಣೆ ಬಳಿಕ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಗುಬ್ಬಿ ಕಾಂಗ್ರೆಸ್ ಶಾಸಕ ಹೇಳಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡಿದೆ.ಈಗಾಗಲೇ ಅವರಿಗೆ ಸೋಲಿನ ಭಯ ಶುರುವಾಗಿದೆ.
ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಲ್ಲಿನ ಶಾಸಕರಿಗೆ ವಿಶೇಷ ಅನುದಾನ ಕೊಡುತ್ತಿಲ್ಲ. ಹೊಸ ಕೆಲಸಗಳು ಆಗುತ್ತಿಲ್ಲ. ಹಿಂದಿನ ಬಿಲ್ ತುಂಬದ ಸ್ಥಿತಿಯಿದೆ ಎಂದು ಆರೋಪಿಸಿದರು.
ನಿನ್ನೆ ಎಲ್ಲರೊಂದಿಗೆ ಚರ್ಚಿಸಿದ್ದು ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ ಒಗ್ಗಟ್ಟಾಗಿ ಚುನಾವಣೆ ಎದುರಿಸಲು ನಿರ್ಧರಿಸಿದ್ದೇವೆ. ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಬೇಕು ಎನ್ನುವುದು ಎಲ್ಲರ ಆಸೆಯಾಗಿದೆ. ನಾನು ಹೊರಗಿನವಲ್ಲ. ಹುಬ್ಬಳ್ಳಿ ಜನ್ಮಭೂಮಿ, ಬೆಳಗಾವಿ ಕರ್ಮಭೂಮಿ. ಇಲ್ಲಿಯೇ ಮನೆ ಕೂಡ ಮಾಡುತ್ತೇನೆ.
ದಿ. ಸುರೇಶ ಅಂಗಡಿ ಅವರ ಸಾಧನೆಗಳು ನನ್ನ ಕಣ್ಮುಂದಿವೆ. ಅಂಗಡಿಯವರು ಪ್ರತಿ ಹಂತದಲ್ಲೂ ನನ್ನ ಜೊತೆ ಚರ್ಚಿಸುತ್ತಿದ್ದರು. ಸಂಸದೆ ಮಂಗಳಾ ಅಂಗಡಿ ಅವರು ಕೆಲವೇ ವರ್ಷ ಸಂಸದರಾಗಿದ್ದರು, ವಿಶನ್ ಇಟ್ಟುಕೊಂಡು ಕೆಲಸ ಮಾಡಿದ್ದಾರೆ.ಅವರ ಅಭಿವೃದ್ಧಿ,ವಿಚಾರಗಳನ್ನು ಮುಂದುವರಿಸುತ್ತೇನೆ ಎಂದು ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.