ಮಂಡ್ಯ : ನಾನು ಜೋತ್ಯಿಷ್ಯಕಾರನಲ್ಲ.. ಆದರೆ, ಈ ಲೋಕಸಭಾ ಚುನಾವಣೆ ನಂತರ ಮುಂದಿನ ಡಿಸೆಂಬರ್ ಒಳಗೆ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆಕಸ್ಮಿಕ ಸರ್ಕಾರ. ನಾವು ಹಾಗೂ ಬಿ.ವೈ. ವಿಜಯೇಂದ್ರ ಕಷ್ಟ ಪಡಬೇಕಿಲ್ಲ. ಅವರೇ ಅವರ ಸರ್ಕಾರವನ್ನು ಬೀಳಿಸಿಕೊಳ್ತಾರೆ ಎಂದು ಕುಟುಕಿದರು.
ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ನ್ಯಾಚುರಲ್ ಅಲಯನ್ಸ್. ರಾಜ್ಯ ಅಭಿವೃದ್ಧಿಗಾಗಿ ಈ ಮೈತ್ರಿ ನಿರ್ಧಾರ. ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಹಾಲು ಜೇನು ಇದ್ದಹಾಗೆ. ಹಿಂದೆ ಬಿಜೆಪಿ ಜೊತೆ ಸರ್ಕಾರ ಮಾಡಿದ ದಿನದಿಂದ ಜೆಡಿಎಸ್ ಮುಗಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಛೇಡಿಸಿದರು.
17 ವರ್ಷ ವನವಾಸ ಅನುಭವಿಸಿದ್ದೇನೆ
20 ತಿಂಗಳ ಆಡಳಿತ ಇಂದಿಗೂ ಜನ ನೆನೆಯುತ್ತಾರೆ. ಅಧಿಕಾರ ಹಸ್ತಾಂತರ ಮಾಡಿಲ್ಲ ಎಂಬ ಆರೋಪ ನನ್ನ ಮೇಲೆ ಮಾಡ್ತಾರೆ. ನಾನು ಮಾಡದೇ ಇರುವ ತಪ್ಪನ್ನು ನನ್ನ ತಲೆ ಮೇಲೆ ಹೊತ್ತಿದ್ದೇನೆ. 17 ವರ್ಷ ವನವಾಸ ಅನುಭವಿಸಿದ್ದೇನೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿಕ್ಕೆ ಕಾರಣ ಅವರ ಶಕ್ತಿ ಅಲ್ಲ. ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ಆಗದೇ, ನಮ್ಮಲ್ಲಿದ್ದ ಪೈಪೋಟಿ ಅವರಿಗೆ ಲಾಭವಾಗಿದೆ. ಕಾಂಗ್ರೆಸ್ ಸರ್ಕಾರ ಆಕಸ್ಮಿಕ ಸರ್ಕಾರ ಎಂದು ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು.