ಶಿವಮೊಗ್ಗ : ಮಗ ಸೋಲುತ್ತಾನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ನನ್ನ ಮನೆಗೆ ಬರುತ್ತೇನೆ ಅಂತ ಹೇಳುತ್ತಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಕುಟುಕಿದರು.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಾವ ಮುಖ ಇಟ್ಟುಕೊಂಡು ಯಡಿಯೂರಪ್ಪನವರು ನನ್ನ ಮನೆಗೆ ಬರುತ್ತಾರೆ..? ಎಂದು ಪ್ರಶ್ನೆ ಮಾಡಿದರು.
ಈಗ ರಾಘಣ್ಣರವರಿಗೆ ಬಿಜೆಪಿ ಕಾರ್ಯಕರ್ತರು ನೆನಪಾಗುತ್ತಿದ್ದಾರೆ. ಕಾರ್ಯಕರ್ತರ ಮನೆಗಳಿಗೆ ಹೋಗಿ ಯಾರೂ ಕೂಡ ಈಶ್ವರಪ್ಪನವರಿಗೆ ಬೆಂಬಲ ನೀಡಬೇಡಿ ಎಂದು ಹೇಳುತ್ತಿದ್ದಾರೆ. ಕಾರ್ಯಕರ್ತರು ತಕ್ಕ ಉತ್ತರ ನೀಡುವ ಮೂಲಕ ರಾಘಣ್ಣರಿಗೆ ವಾಪಸ್ ಕಳುಹಿಸಿ ಕೊಡುತ್ತಿದ್ದಾರೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಬೆಂಬಲ ಸಿಗುತ್ತಿದೆ. ಒಂದು ಲಕ್ಷ ಮತಗಳ ಅಂತರದಿಂದ ನಾನು ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಏ.12 ರಂದು ಈಶ್ವರಪ್ಪ ನಾಮಪತ್ರ ಸಲ್ಲಿಕೆ
ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ಏಪ್ರಿಲ್ 12ನೇ ತಾರೀಖು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ರಾಮಣ್ಣ ಶೆಟ್ಟಿ ಪಾರ್ಕಿನಿಂದ ಮೆರವಣಿಗೆ ಹೊರಡಲಿದೆ. ನಮ್ಮ ಪತ್ರ ಸಲ್ಲಿಕೆ ಸಂದರ್ಭದಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ಈಶ್ವರಪ್ಪ ಅವರು ಇಂದು ಸಾಗರದಲ್ಲಿ ರಾಷ್ಟ್ರಭಕ್ತರ ಬಳಗದ ಹೆಸರಿನಲ್ಲಿ ಚುನಾವಣಾ ಕಾರ್ಯಾಲಯ ಉದ್ಘಾಟಿಸಿದ್ದಾರೆ.