ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಬಿಜೆಪಿ ಪಕ್ಷದ ಘಟಾನುಘಟಿ ಅಭ್ಯರ್ಥಿಗಳಾದ ತೇಜಸ್ವಿ ಸೂರ್ಯ , ಡಾ. ಸಿಎನ್ ಮಂಜುನಾಥ್, ಡಾ.ಕೆ ಸುಧಾಕರ್ ಮುಂತಾದವರು ಬೃಹತ್ ರೋಡ್ ಶೋ ಮೂಲಕ ಸಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ ಸಿ.ಎನ್ ಮಂಜುನಾಥ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 11 ಘಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಬೃಹತ್ ಶಕ್ತಿ ಪ್ರದರ್ಶನಕ್ಕೆ ಕೂಡ ಸಜ್ಜು ಮಾಡಿಕೊಂಡಿದ್ದಾರೆ.
ನಾಮಪತ್ರ ಸಲ್ಲಿಕೆ ನಂತರ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ, ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ, ಬಿಎಸ್ವೈ, ಮಾಜಿ ಸಚಿವರಾದ ಅಶ್ವಥ್ ನಾರಾಯಣ್, ಸಿಪಿವೈ, ಶಾಸಕರಾದ ಮುನಿರತ್ನ, ಎಂ. ಕೃಷ್ಣಪ್ಪ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಮುಂತಾದವರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಮಾಂಸಹಾರ ಪ್ರಿಯರಿಗೆ ಬಿಗ್ ಶಾಕ್: ಕೋಳಿ, ಮೀನು ರೇಟು ಹೆಚ್ಚಳ!
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಡಾ.ಕೆ. ಸುಧಾಕರ್ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಸುಧಾಕರ್ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಪೇಗೌಡ ಪುತ್ಥಳಿಗೆ ಮಾಲಾರ್ಪಣೆ ಮಾಡುತ್ತಾರೆ. ಬಳಿಕ ಆಟೋ ಚಾಲಕರು, ಪೌರ ಕಾರ್ಮಿಕರು, ರೈತರು, ಮಹಿಳೆಯರ ಆಶೀರ್ವಾದ ಪಡೆಯಲಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕ ಮಧ್ಯಾಹ್ನ 3 ಗಂಟೆಗೆ ಬೃಹತ್ ರೋಡ್ ಶೋ ನಡೆಯಲಿದ್ದು, ರೋಡ್ ಶೋನಲ್ಲಿ ರಾಜ್ಯ ಮಟ್ಟದ ಮೈತ್ರಿ ನಾಯಕರು ಭಾಗಿಯಾಗಲಿರುವರು. ಬಿವೈ ವಿಜಯೇಂದ್ರ, ಆರ್. ಅಶೋಕ್, ಎಚ್.ಡಿ ಕುಮಾರಸ್ವಾಮಿ, ಪಿ.ಸಿ ಮೋಹನ್, ಅರವಿಂದ ಲಿಂಬಾವಳಿ, ತಾರಾ ಅನುರಾಧ ಭಾಗಿಯಾಗಲಿದ್ದಾರೆ.
ಇನ್ನು, ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಬೆಳಿಗ್ಗೆ 10ಕ್ಕೆ ಜಯನಗರ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ಜಯನಗರ 4ನೇ ಬ್ಲಾಕ್ನ ಮಯ್ಯಾಸ್ ಹೋಟೆಲ್ನಿಂದ ರೋಡ್ ಶೋ ಆರಂಭಿಸಲಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ಆರ್. ಅಶೋಕ್, ಅಶ್ವತ್ಥನಾರಾಯಣ್, ಪ್ರತಾಪ ಸಿಂಹ ಸೇರಿದಂತೆ ಹಲವು ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ. ರೋಡ್ ಶೋನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಲಿದ್ದಾರೆ.