ಬೆಂಗಳೂರು:ಕಳೆದ ವಿಧಾನಸಭೆ ಚುನಾವಣೆ ವೇಳೆ ಅಕ್ರಮ ನಡೆಸಿದ ಆರೋಪದ ಮೇಲೆ ನಿಪ್ಪಾಣಿ ಶಾಸಕಿ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ದ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಹೌದು, ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ಪೀಠವು ಪ್ರಕರಣ ಸಂಬಂಧ ಶಶಿಕಲಾ ಜೊಲ್ಲೆ ವಿರುದ್ಧ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್, ಅದನ್ನು ಆಧರಿಸಿ ತನಿಖೆ ನಡೆಸಿ ಪೊಲೀಸರು ಸಲ್ಲಿಸಿದ್ದ ಆರೋಪ ಪಟ್ಟಿ ಮತ್ತು ಪ್ರಕರಣ ಸಂಬಂಧ ನಿಪ್ಪಾಣಿ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಪಡಿಸಿದೆ. ಅಲ್ಲದೇ, ಅರ್ಜಿದಾರ ಆರೋಪಿಯನ್ನು ಪ್ರಕರಣದಿಂದ ಮುಕ್ತಗೊಳಿಸಲಾಗಿದೆ ಎಂದು ಹೇಳಿದೆ.
ಶಶಿಕಲಾ ಜೊಲ್ಲೆ ಅವರನ್ನು ಪ್ರತಿನಿಧಿಸಿದ್ದ ವಕೀಲ ಶಿವರಾಜ್ ಎಸ್. ಬಳ್ಳೊಳಿ, ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಅರ್ಜಿದಾರರು ಚುನಾವಣಾ ಏಜೆಂಟ್ ಬಳಿ 10 ಸಾವಿರ ರೂಪಾಯಿ ನಗದು ಸಿಕ್ಕಿದ್ದ ಮಾತ್ರಕ್ಕೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದಲ್ಲಿ ಅರ್ಜಿದಾರರ ಪಾತ್ರವಿಲ್ಲ. ಹಣ ಯಾರಿಗೆ ಕೊಡಲಾಗುತ್ತಿತ್ತು ಎಂದೂ ಗೊತ್ತಿಲ್ಲ. ಹಣ ಪತ್ತೆಯಾದ ಸ್ಥಳದಲ್ಲಿ ಹಣ ಪಡೆದುಕೊಳ್ಳಲು ಬಂದವರು ಯಾರೂ ಇರಲಿಲ್ಲ. ಆರೋಪ ಸಾಬೀತುಪಡಿಸುವಂತ ಅಂಶಗಳು ಎಫ್ಐಆರ್ನಲ್ಲಿಲ್ಲ. ಪ್ರಕರಣ ದಾಖಲಿಸಿರುವುದು ಕಾನೂನಿನ ದುರ್ಬಳಕೆಯಾಗಿದೆ ಎಂದು ಪೀಠಕ್ಕೆ ಮನವವರಿಕೆ ಮಾಡಿಕೊಟ್ಟರು.