ಚೆನ್ನೈ : ಕೇಂದ್ರದಲ್ಲಿ ಈ ಬಾರಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ದಕ್ಷಿಣ ಭಾರತದ ಕೇಂದ್ರಾಡಳಿತ ಪ್ರದೇಶ ಪುದುಚೆರಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಮತ್ತು ಹಾಲಿ ಸಂಸದ ವಿ ವೈಥಿಲಿಂಗಂ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪುದುಚೇರಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಕಾಂಗ್ರೆಸ್ ಮತ್ತು ಡಿಎಂಕೆ ಬದ್ಧವಾಗಿವೆ ಎಂದು ಹೇಳಿದರು.
ಇದನ್ನೂ ಓದಿ: ಅಶ್ವಿನಿ ಪುನೀತ್ ರಾಜ್ಕುಮಾರ್ ನಿಂದನೆ: ಕಿಡಿಗೇಡಿಗಳಿಗೆ ಸಿಎಂ ವಾರ್ನಿಂಗ್
ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ, ಕೇಂದ್ರದ ಕೈಗೊಂಬೆಯಾಗಿದ್ದಾರೆ ಎಂದ ಸ್ಟಾಲಿನ್, ದೊಡ್ಡ ರಾಜ್ಯಗಳ ಹಕ್ಕುಗಳಷ್ಟೇ ಅಲ್ಲ. ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶಗಳ ಹಕ್ಕುಗಳನ್ನೂ ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ.
10 ವರ್ಷಗಳ ಬಿಜೆಪಿ ಆಡಳಿತದಲ್ಲಿ ಪುದುಚೇರಿಗೆ ಏನೂ ಸಿಕ್ಕಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
‘ಎಸ್ಸಿ, ಎಸ್ಟಿ ಮತ್ತು ದುರ್ಬಲ ವರ್ಗದವರ ಕಲ್ಯಾಣಕ್ಕೆ ಮೋದಿ ಏನನ್ನೂ ಮಾಡಿಲ್ಲ. ಕೇವಲ ಧರ್ಮ ಮತ್ತು ಜಾತಿ ಹೆಸರಲ್ಲಿ ಪ್ರಚಾರ ಮಾಡುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.