ಬೆಂಗಳೂರು : ಇಂದಿನಿಂದ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಾವಣಗೆರೆ, ತುಮಕೂರು, ಬಾಗಲಕೋಟೆ, ಬೀದರ್, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಕರಾವಳಿ, ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯಾಗಲಿದೆ. ಇಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ನಾಳೆ ಈ ಜಿಲ್ಲೆಗಳಲ್ಲಿ ಮಳೆ
ಏಪ್ರಿಲ್ 9ರಂದು ದಕ್ಷಿಣ ಕನ್ನಡ, ಉಡುಪಿ, ಬೇದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ
ಬೆಂಗಳೂರಿನಲ್ಲಿ 37.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ಕಳೆದ 15 ವರ್ಷಗಳಲ್ಲಿ ಏಪ್ರಿಲ್ ತಿಂಗಳಲ್ಲಿ ದಾಖಲಾದ 3ನೇ ಗರಿಷ್ಠ ಉಷ್ಣಾಂಶವಾಗಿದೆ. ಶನಿವಾರ ಹಾಗೂ ಭಾನುವಾರದಂದು 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅಂದರೆ, ವಾಡಿಕೆ ಪ್ರಮಾಣಕ್ಕಿಂತ 3.6 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಕಳೆದ ವರ್ಷ ಏಪ್ರಿಲ್ನಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಗರಿಷ್ಠ ಉಷ್ಣಾಂಶದಿಂದಾಗಿ ಬೆಂಗಳೂರು ಮಂದಿ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.