ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರನ್ನು NIA ಅಧಿಕಾರಿಗಳು ನಿನ್ನೆ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ.
ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ ಅಬ್ದುಲ್ ಮತೀನ್ ತಾಹ, ಮುಸಾವಿರ್ ಹುಸೇನ್ನನ್ನು ಎನ್ಐಎ ಪೊಲೀಸರು ಕರೆತಂದರು. ಇಬ್ಬರನ್ನೂ ರಾಮೇಶ್ವರಂ ಕೆಫೆ ಕರೆದೊಯ್ದು ಸ್ಥಳ ಮಹಜರು ಮಾಡಿ ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ. ಬಾಂಬ್ ಬ್ಲಾಸ್ಟ್ ಕೇಸಲ್ಲಿ ಬಂಧಿತರಾಗಿರುವ ಮುಜಾಮಿಲ್ ಶರೀಫ್, ಮಾಜ್ ಮಾನಿರ್ ಹೇಳಿಕೆ ಅಧರಿಸಿ ವಿಚಾರಣೆ ನಡೆಸಲಾಗುವುದು.
ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ : NIA ಯಿಂದ ಶಂಕಿತರ ಬಂಧನ
ಇಂದು ಬೆಳಗ್ಗೆ 10 ಗಂಟೆಗೆ ಎನ್ಐಎ ವಿಶೇಷ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ. ಭದ್ರತಾ ದೃಷ್ಟಿಯಿಂದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಿರುವ ಅಧಿಕಾರಿಗಳು, 14 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲು ತಯಾರಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಓರ್ವ ಶಂಕಿತ ಉಗ್ರ ವಶಕ್ಕೆ :
ಹುಬ್ಬಳ್ಳಿಯಲ್ಲಿ ಓರ್ವ ಶಂಕಿತನನ್ನ NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿಯ ಗಣೇಶ ಪೇಟೆಯ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಶೋಯೆಬ್ ಮಿರ್ಜಾ ಎಂಬಾತನ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಯಾವ ಪ್ರಕರಣ ಸಂಬಂಧ ವಶಕ್ಕೆ ಅನ್ನೋ ಮಾಹಿತಿ ಇನ್ನು ಲಭ್ಯವಾಗಿಲ್ಲ.