ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಲೆಗೆ ಬಿದ್ದಿರುವ ಬಾಂಬರ್ಗಳನ್ನು (ಶಂಕಿತ ಉಗ್ರರು) ನ್ಯಾಯಾಲಯ ಎನ್ಐಎ ಕಸ್ಟಡಿಗೆ ನೀಡಿದೆ.
ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ NIA ವಶಕ್ಕೆ ನೀಡಿ ಆದೇಶಿಸಿದ್ದಾರೆ.
ಇಬ್ಬರು ಆರೋಪಿಗಳನ್ನು NIA ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. NIA ಪರವಾಗಿ ಎಸ್ಪಿಪಿ ಪ್ರಸನ್ನಕುಮಾರ್ ಹಾಜರಾಗಿ ವಾದ ಮಂಡಿಸಿದರು. ಈ ವೇಳೆ NIA ಎಸ್ಪಿ ಶಿವವಿಕ್ರಮ್ ಕೂಡ ಹಾಜರಿದ್ದರು.
ಮಾರ್ಚ್ 1ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿತ್ತು. ನೌಕರರು ಮತ್ತು ಗ್ರಾಹಕರು ಸೇರಿದಂತೆ 9ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟದಿಂದ ಅಪಾರ ಪ್ರಮಾಣದ ಹಾನಿಯಾಗಿತ್ತು. ಇತ್ತ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ಎನ್ಐಎ ತಂಡ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.