ವಿಜಯನಗರ : ದೇವರು ನನಗೆ ಶಕ್ತಿ ಕೊಟ್ಟರೆ ಇನ್ನೊಂದು ವಿಧಾನಸಭಾ ಚುನಾವಣೆ ಮಾಡುತ್ತೇನೆ. ಈ ಹಿಂದೆ ಆದ ತಪ್ಪನ್ನು ಸರಿಪಡಿಸಿಕೊಂಡು ಚುನಾವಣೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾನಾಹೊಸಹಳ್ಳಿಯಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ಈಗಾಗಲೇ 23 ಲೋಕಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಬಂದಿರುವೆ. ರಾಜ್ಯದ ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂದು ತಿಳಿಸಿದರು.
ಬಹಳ ಹೊತ್ತು ನಾನು ಮಾತನಾಡುವುದಿಲ್ಲ. ನನಗೆ 82 ವರ್ಷ ವಯಸ್ಸು ಆಗಿದೆ. ಶಾಸಕ ಜನಾರ್ದನ ರೆಡ್ಡಿ ಮರಳಿ ಬಿಜೆಪಿ ಪಕ್ಷಕ್ಕೆ ಬಂದಿದ್ದು, ನಮಗೆ ಒಂದು ದೊಡ್ಡ ಶಕ್ತಿ ಬಂದಿದೆ. ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ದೇವೆಗೌಡರ ಜೊತೆಯಲ್ಲಿ ಮೋದಿ ಅವರು ಆತ್ಮೀಯವಾಗಿ ಇದ್ದರು. ನಾವು ಕೇವಲ ಲೋಕಸಭಾ ಚುನಾವಣೆಗೆ ಮಾತ್ರ ಮೈತ್ರಿ ಮಾಡಿಕೊಂಡಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ದೇಶದಲ್ಲಿ ಧೂಳಿಪಟ ಆಗಿದೆ
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಾಲು ಜೇನಿನ ರೀತಿಯಲ್ಲಿ ಮುಂದುವರೆಯುತ್ತದೆ. ಕಾಂಗ್ರೆಸ್ ದೇಶದಲ್ಲಿ ಧೂಳಿಪಟ ಆಗಿದೆ. ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರು ಎಂದು ಹೆಸುರು ಹೇಳಿ. ಕಾಂಗ್ರೆಸ್ ಪಕ್ಷಕ್ಕೆ ದಯನೀಯ ಪರಿಸ್ಥಿತಿ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷಕ್ಕೆ ವೋಟು ಕೇಳುವ ಹಕ್ಕು ಇಲ್ಲ
ರಾಜ್ಯದಲ್ಲಿ ಕಾಂಗ್ರೆಸ್ ಯಾವುದೇ ಅಭಿವೃದ್ಧಿ ಮಾಡಿಲ್ಲ. ರಾಜ್ಯ ಕಾಂಗ್ರೆಸ್ ಜನರ ಮುಂದೆ ಅಪರಾಧಿ ಸ್ಥಾನದಲ್ಲಿ ನಿಂತಿದೆ. ರಾಜ್ಯದಲ್ಲಿ ಒಂದೇ ಒಂದು ಕಿಲೋಮೀಟರ್ ರಸ್ತೆ ನಿರ್ಮಾಣ ಆಗುತ್ತಿಲ್ಲ. ಜನರ ಬಳಿ ಬಂದು ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ಕೇಳುವ ಹಕ್ಕು ಇಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಕುಟುಕಿದರು.