ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಮತ್ತೊಂದು ದೊಡ್ಡ ಆಘಾತವಾಗಿದೆ. ಹಾಲಿ ಸಂಸದ ಕರಡಿ ಸಂಗಣ್ಣ ಬಿಜೆಪಿ ಪಕ್ಷಕ್ಕೆ ವಿದಾಯ ಹೇಳಿದ್ದಾರೆ.
ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆ ಸಂಸದ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಕರಡಿ ಸಂಗಣ್ಣ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆ ಕಂಡು ತೀವ್ರ ನೋವಾಗಿದೆ. ನನ್ನ ಜೊತೆಗಿದ್ದೇ ಬೆನ್ನಿಗೆ ಚೂರಿ ಹಾಕಿದವರಿಗೆ ಕೊಪ್ಪಳದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ನನ್ನ ಕೆಲಸವನ್ನು ಬಿಜೆಪಿ ಹೈಕಮಾಂಡ್ ಕೂಡ ಗುರುತಿಸಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಕರಡಿ ಸಂಗಣ್ಣ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಇತ್ತ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ರವಾನೆ ಮಾಡಿದ್ದಾರೆ.
ನಾಳೆ ಕಾಂಗ್ರೆಸ್ ಪಕ್ಷ ಸೇರ್ಪಡೆ
ಬಿಜೆಪಿಗೆ ವಿದಾಯ ಹೇಳಿರುವ ಸಂಸದ ಕರಡಿ ಸಂಗಣ್ಣ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ನಾಳೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.