Thursday, May 2, 2024

ಒಂದೇ ಮನೆಯಲ್ಲಿ ನಾಲ್ವರ ಬರ್ಬರ ಹತ್ಯೆ

ಗದಗ : ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ಮಧ್ಯರಾತ್ರಿ ನಡೆದಿದೆ. ಇಡೀ ಗದಗ ಜಿಲ್ಲೆಯೇ ಬೆಚ್ಚಿ ಬಿದ್ದಿದೆ.

ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದ ದುರ್ದೈವಿಗಳು.

ಮಧ್ಯರಾತ್ರಿ 2.30 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದೆ. ಮಲಗಿದ್ದ ಜಾಗದಲ್ಲೇ ನಾಲ್ವರನ್ನು ಹತ್ಯೆ ಮಾಡಲಾಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಚರಂಡಿಯಲ್ಲೇ ಎಸೆದು ಹೋಗಿದ್ದಾರೆ.

ಕಿಟಕಿಯನ್ನು ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕಿರಿಚಾಟದ ಸದ್ದು ಕೇಳಿ ಕಾರ್ತಿಕ್​ ಎಚ್ಚರಗೊಂಡಿದ್ದಾರೆ. ಆಗ ದುಷ್ಕರ್ಮಿಗಳು ಕಾರ್ತಿಕ್​ನನ್ನೂ ಕೊಲೆ ಮಾಡಿದ್ದಾರೆ.

ಬಳಿಕ ದುಷ್ಕರ್ಮಿಗಳು ಪ್ರಕಾಶ್ ಬಾಕಳೆ ಮತ್ತು ಪತ್ನಿ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರು ಮಲಗಿದ್ದ ಕೋಣೆಯ ಬಾಗಲಿ ತಟ್ಟಿದ್ದಾರೆ. ಆಗ ದಂಪತಿ ಬಾಗಿಲು ತೆಗೆಯದೆ ಪೊಲೀಸರಿಗೆ ಕರೆ ಮಾಡಿದ್ದಾರೆ. ಎಚ್ಚೆತ್ತ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ವಿಧಿವಿಜ್ಞಾನ ಪ್ರಯೋಗಾಲಯ ತಂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ.

RELATED ARTICLES

Related Articles

TRENDING ARTICLES