ಬೆಂಗಳೂರು : ಬಿಜೆಪಿ ಪಕ್ಷದಿಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಮುಂದಿನ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿರುದ್ಧ ಬಂಡಾಯ (ಪಕ್ಷೇತರ) ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಹೀಗಾಗಿ, ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪುತ್ರ ಕೆ.ಇ. ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ತಮ್ಮ ನಾಮಪತ್ರ ಹಿಂಪಡೆಯುವಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಯಜೇಂದ್ರ ಸೇರಿ ಹಲವು ನಾಯಕರು ಮನವಿ ಮಾಡಿದ್ದರು. ಆದರೆ, ಪಟ್ಟು ಬಿಡದೆ ಈಶ್ವರಪ್ಪ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.
ಪುತ್ರನಿಗೆ ಟಿಕೆಟ್ ಸಿಗದಿದ್ದಕ್ಕೆ ಯಡಿಯೂರಪ್ಪ ಕುಟುಂಬದ ವಿರುದ್ಧ ಈಶ್ವರಪ್ಪ ಸಮರ ಸಾರಿದ್ದಾರೆ. ಯಡಿಯೂರಪ್ಪ ಮತ್ತು ಮಕ್ಕಳಿಂದ ಬಿಜೆಪಿಗೆ ಉಳಿಗಾಲವಿಲ್ಲ. ಕುಟುಂಬ ರಾಜಕಾರಣವನ್ನು ಬೇರು ಸಮೇತ ಕಿತ್ತು ಹಾಕುತ್ತೇನೆ. ಚುನಾವಣೆಯಲ್ಲಿ ಗೆದ್ದು ಪ್ರಧಾನಿ ಮೋದಿಗೆ ಬೆಂಬಲ ನೀಡುತ್ತೇನೆ ಎಂದು ಸವಾಲ್ ಹಾಕಿದ್ದಾರೆ.