ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ, ಬದಲಾಗಿ ಅವರು ದುಬಾರಿ ಮ್ಯಾನ್ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಬಿಜೆಪಿಯು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಆರೋಪ ಮಾಡಿದ್ದಾರೆ.
ಬಿಜೆಪಿ ನಾಯಕರು ಮತ್ತು ಅಭ್ಯರ್ಥಿಗಳು ಸಂವಿಧಾನ ಬದಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅದನ್ನು ನಿರಾಕರಿಸುತ್ತಿದ್ದಾರೆ. ಇದು ಅವರ ಚುನಾವಣಾ ತಂತ್ರವಲ್ಲದೇ ಮತ್ತೆ ಏನೂ ಅಲ್ಲ ಎಂದು ತಿಳಿಸಿದ್ದಾರೆ.
ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ ಪ್ರಿಯಾಂಕಾ ಗಾಂಧಿ ಅವರು, ಪಿಎಂ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಸೂಪರ್ ಮ್ಯಾನ್ ಆಗಿ ವೇದಿಕೆಗೆ ಆಗಮಿಸುತ್ತಾರೆ. ಆದರೆ, ನೀವು ಪಿಎಂ ಮೋದಿ ಅವರು ದುಬಾರಿ ಮ್ಯಾನ್ ಅನ್ನುವುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಲೇವಡಿ ಮಾಡಿದ್ದಾರೆ.
ಬಡತನ ಹೋಗಲಾಡಿಸಲು ಏಕೆ ಸಾಧ್ಯವಾಗುತ್ತಿಲ್ಲ
ಬಿಜೆಪಿ ನಾಯಕರು ಪ್ರಧಾನಿಯನ್ನು ಶಕ್ತಿಶಾಲಿ ಎಂದು ಬಿಂಬಿಸುತ್ತಾರೆ ಮತ್ತು ಅವರು ಚಿಟಿಕೆ ಹೊಡೆದು ರಷ್ಯಾ ಹಾಗೂ ಉಕ್ರೇನ್ ಯುದ್ಧವನ್ನು ನಿಲ್ಲಿಸಬಹುದು ಎಂದು ಹೇಳುತ್ತಾರೆ. ಹಾಗಿರುವಾಗ ಬಡತನವನ್ನು ಹೋಗಲಾಡಿಸಲು ಮೋದಿ ಅವರಿಂದ ಏಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.