ಹಾವೇರಿ: ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡುವುದನ್ನು ಬಿಡಬೇಕು. ಚುನಾವಣಾ ನೀತಿ ಸಂಹಿತೆ ಜಾರಿಯಲಿದ್ದರೂ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಅನುಮತಿ ಪಡೆದು ರಾಜ್ಯಕ್ಕೆ ಬರ ಪರಿಹಾರ ನೀಡಿರುವುದು, ರಾಜ್ಯದ ರೈತರ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಇರುವ ಕಾಳಜಿ ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಇಂದು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ಪಡೆಯಲು ಇರುವ ನಿಯಮಗಳನ್ನು ರಾಜ್ಯ ಸರಕಾರದವರು ಸರಿಯಾಗಿ ಪಾಲನೆ ಮಾಡಲಿಲ್ಲ. ಅದರಲ್ಲಿ ರಾಜಕಾರಣ ಮಾಡುತ್ತ ಕಾಲಹರಣ ಮಾಡಿದರು. ಇವರು ಸರಿಯಾಗಿ ನಿಯಮ ಪಾಲಿಸಿದ್ದರೆ ಇಷ್ಟೊತ್ತಿಗಾಗಲೆ ಪರಿಹಾರ ಬಂದು ಬಿಡುತ್ತಿತ್ತು.
ಇದನ್ನೂ ಓದಿ: ಸುಪ್ರೀಂಕೋರ್ಟ್ ಸ್ಪಷ್ಟ ಸೂಚನೆ ನೀಡೋವರೆಗೂ ಏಕೆ ರಾಜ್ಯಕ್ಕೆ ಒಂದು ಪೈಸೆಯನ್ನೂ ಕೊಡಲಿಲ್ಲ ಮೋದಿಯವರೇ: ಸಿ.ಎಂ.ಪ್ರಶ್ನೆ
ಕೇಂದ್ರ ಸರಕಾರ ಯಾವತ್ತೂ ಪರಿಹಾರ ಕೊಡುವುದಿಲ್ಲ ಎಂದು ಹೇಳಿಲ್ಲ ಇವರು ಪರಿಹಾರ ಕೊಡಲು ಕೇಳಬೇಕಾದ ರೀತಿಯಲ್ಲಿ ಕೇಳಿಲ್ಲ ಆದರೂ ಕೇಂದ್ರ ಸರ್ಕಾರ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಆಯೋಗದ ಅನುಮತಿ ಪಡೆದು ಬರ ಪರಿಹಾರ ಬಿಡುಗಡೆ ಮಾಡಿದೆ. ಇದರಲ್ಲಿ ರಾಜ್ಯ ಸರಕಾರ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಹೇಳಿದರು.
ಕಾಂ ಕಾಂಗ್ರೆಸ್ ನವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತೊಕ್ರಿಯಿಸಿದ ಅವರು ಕಾಂಗ್ರೆಸ್ ನವರು ಹತಾಶರಾಗಿದ್ದಾರೆ, ಕೊನೆಯ ಅಸ್ತ್ರವಾಗಿ ಭಾವನಾತ್ಮಕಾಗಿ ಸೆಳೆಯುವ ತಂತ್ರ ಮಾಡುತ್ತಿದ್ದಾರೆ ದಲಿತರಿಗೆ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಮೋದಿಯವರು ಪ್ರಧಾನಿ ಆದ ತಕ್ಷಣ ಸಂವಿಧಾನದ ಬಗ್ಗೆ ಮಾತನಾಡಿದ್ದಾರೆ. ಯಾರೇ ಬಂದರೂ ಸಂವಿಧಾನ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂಬುದು ಗೊತ್ತಿದ್ದರೂ ಕಾಂಗ್ರೆಸ್ ನವರು ಅದರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.