ಬಳ್ಳಾರಿ : ನೂತನ ಜಿಲ್ಲೆ ವಿಜಯನಗರದ ಹಲವು ಹಳ್ಳಿಗಳಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ. ತುಕಾರಾಂ ಇಂದು ಭರ್ಜರಿ ಪ್ರಚಾರ ನಡೆಸಿ, ಮತಯಾಚಿಸಿದರು.
ಹೊಸಪೇಟೆ ತಾಲೂಕಿನ ಗಾದಿಗನೂರು, ಭುವನಹಳ್ಳಿ, ಪಾಪಿನಾಯಕನಹಳ್ಳಿ, ಬೈಲೋದ್ದಿಗೆ, ಕಾಕುಭಾಳು, ಸೇರಿದಂತೆ ಹಲವು ಹಳ್ಳಿಗಳಲ್ಲಿ ಪ್ರಚಾರವನ್ನು ಕೈಗೊಂಡರು.
ಕೆಂದ್ರ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಗಳನ್ನು ಮತದಾರರಿಗೆ ತಿಳಿಸುವ ಮೂಲಕ ಮತಯಾಚನೆ ಮಾಡಿದರು. ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆದು ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಸುಮಾರು 60 ಸಾವಿರ ರೂಪಾಯಿ ನೀಡುತ್ತೆ. ಅದು 5 ವರ್ಷಕ್ಕೆ ಲೆಕ್ಕಹಾಕಿದರೆ ಸುಮಾರು 3 ಲಕ್ಷವಾಗುತ್ತೆ ಎಂದು ಹೇಳಿದರು.
ಕೆಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಂದು ಕುಟುಂಬಕ್ಕೆ ಪ್ರತಿ ವರ್ಷ 1 ಲಕ್ಷ ರೂ. ನೀಡಲಾಗುತ್ತದೆ. ಒಟ್ಟಾರೆಯಾಗಿ ಕಾಂಗ್ರೆಸ್ ಬಡವರಿಗೆ ಸುಮಾರು 8 ಲಕ್ಷ ರೂಪಾಯಿಯನ್ನು ನಿಮ್ಮ ಮನೆಬಾಗಿಲಿಗೆ ತಲುಪಿಸುತ್ತದೆ. ನಮ್ಮ ಕಾಂಗ್ರೆಸ್ ಪಕ್ಷ ಬಡವರ ಪಕ್ಷವಾಗಿದೆ. ಆದ್ದರಿಂದ ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.
ಸಚಿವ ಜಮೀರ್ ಮತಯಾಚನೆ
ಕುರುಗೋಡು ಪಟ್ಟಣದಲ್ಲಿ ನಿನ್ನೆ ನಡೆದ ಪ್ರಚಾರ ಕಾರ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಭಾಗವಹಿಸಿದ್ದರು. ಸಚಿವ ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಕಂಪ್ಲಿ-ಕುರುಗೋಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕುರುಗೋಡು ಪುರಸಭೆ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.