ಮಂಗಳೂರು : ಕಾರು ಹಾಗೂ ರೋಗಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರಿನ ಗಡಿಭಾಗ ಮಂಜೇಶ್ವರ ಹೆದ್ದಾರಿಯಲ್ಲಿ ನಡೆದಿದೆ.
ಶಿವಕುಮಾರ್ (54) ಮಕ್ಕಳಾದ ಶರತ್ ಮೆನನ್ (23) ಹಾಗೂ ಸೌರವ್ (15) ಮೃತ ದುರ್ದೈವಿಗಳು. ಆ್ಯಂಬುಲೆನ್ನಲ್ಲಿದ್ದ ರೋಗಿ ಉಷಾ, ಆ್ಯಂಬುಲೆನ್ಸ್ ಚಾಲಕ ಮತ್ತು ಜೊತೆಗಿದ್ದ ಶಿವದಾಸ್ ಎಂಬುವವರು ಗಾಯಗೊಂಡಿದ್ದಾರೆ.
ಕೇರಳದ ಚಟ್ಟಂಚಾಲ್ ನಲ್ಲಿ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಗಾಯಗೊಂಡಿದ್ದ ಉಷಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾಸರಗೋಡು ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ತಲಪಾಡಿ-ಮಂಜೇಶ್ವರ-ಕಾಸರಗೋಡು ಹೊಸ ಹೆದ್ದಾರಿಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಆ್ಯಂಬುಲೆನ್ ಹಾಗೂ ಕಾರು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳೀಯರು ಕಾರಿನಿಂದ ಹರಸಾಹಸಪಟ್ಟು ಗಾಯಾಳುಗಳನ್ನು ಹೊರತೆಗೆದಿದ್ದಾರೆ. ಈ ವೇಳೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದವರು ಕೊಲ್ಲೂರು ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಮುಗಿಸಿ ಮರಳಿ ತ್ರಿಶಶೂರಿಗೆ ತೆರಳುತ್ತಿದ್ದರು. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.