ಬಳ್ಳಾರಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ (ಪೆನ್ಡ್ರೈವ್) ಪ್ರಕರಣದ ಹಿಂದಿರುವ ಮಹಾನಾಯಕ ಯಾರು? ನಾವು ಕಾತುರದಿಂದ ಕಾಯುತ್ತಿದ್ದೇವೆ ಎಂದು ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಪ್ರಕರಣ ಕಾನೂನು ಹಂತದಲ್ಲಿ ತನಿಕೆ ನಡೆಯುತ್ತಿದೆ. ಈ ಹಂತದಲ್ಲಿ ಬಿಜೆಪಿ ನಾಯಕರು ಅನಾವಶ್ಯಕ ರಾಜಕೀಯ ಮಾಡುತ್ತಿದ್ದಾರೆ. ಈ ಘಟನೆಯಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮೇಲೆ ಹೊಡೆತ ಬಿದ್ದಿದೆ. ಅದಕ್ಕೆ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣ ಕರ್ನಾಟಕ ಮೇಲೆ ಪ್ರಭಾವ ಬೀರಿದೆ. ಬಿಜೆಪಿ ನಾಯಕರು ಸೋಲಿನ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಮಾಡಿದ ಕೃತ್ಯವನ್ನ ಬಿಜೆಪಿ ಸಮರ್ಥಿಸಿಕೊಳ್ತಿದ್ದಾರೆ. ಈ ಪ್ರಕರಣದ ಹಿಂದೆ ಯಾವ ಷಡ್ಯಂತ್ರವೂ ಇಲ್ಲ. ಪಾಪ ಮಾಡಿದವರು ಶಿಕ್ಷೆ ಅನುಭಿಸ್ತಾರೆ. ಆ ಮಹಾನಾಯಕ ಅಂದ್ರೆ ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.
ಕನಕಪುರದಲ್ಲಿ ಜೆಡಿಎಸ್ ಪ್ರತಿಭಟನೆ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕನಕಪುರದ ಚನ್ನಬಸಪ್ಪ ಸರ್ಕಲ್ನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪ್ರತಿಭಟನೆ ನಡೆಸಿದೆ. ಡಿಸಿಎಂ ಡಿಕೆಶಿ, ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಶಿವರಾಮೇಗೌಡ ಸಿಡಿ ಕಂಪನಿ ನಡೆಸುತ್ತಿದ್ದಾರೆ. ಪೆನ್ ಡ್ರೈವ್ ಹಂಚಿಕೆ ಮಾಡಿ ಹೆಣ್ಣು ಮಕ್ಕಳ ಮಾನಹರಣ ಮಾಡಿದ್ದಾರೆ. ಸಿಡಿ ಹಂಚಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಪ್ರಕರಣವನ್ನ SITಯಿಂದ ಸಿಬಿಐಗೆ ವರ್ಗಾಯಿಸಲು ಆಗ್ರಹಿಸಿದ್ದಾರೆ.