ಬೆಂಗಳೂರು : ಮುಸ್ಲಿಮರು ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಬೇಕು. ದೇಶದ ಅಭಿವೃದ್ಧಿಗೆ ನೀವು ಕೈಜೋಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮರಿಗೆ ಕರೆಕೊಟ್ಟಿದ್ದಾರೆ.
ಮುಸ್ಲಿಂ ಮೀಸಲಾತಿ ಕುರಿತಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ವಾಕ್ಸಮರ ನಡೆಯುತ್ತಿದೆ. ಇದರ ಮಧ್ಯೆಯೇ ಪ್ರಧಾನಿ ಮೋದಿ, ದೇಶಾಭಿವೃದ್ದಿಯ ಕಾರ್ಯದಲ್ಲಿ ಕೈಜೋಡಿಸುವಂತೆ ದೇಶದ ಮುಸ್ಲಿಮರಿಗೆ ಮನವಿ ಮಾಡಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ನಾನು ಮುಸ್ಲಿಂ ಸಮುದಾಯ ಅದರಲ್ಲೂ ಅವರಲ್ಲಿನ ಸುಶಿಕ್ಷಿತ ಸಮುದಾಯಕ್ಕೆ ಮನವಿ ಮಾಡುತ್ತೇನೆ. ಇಡೀ ದೇಶ ಅಭಿವೃದ್ದಿ ಪಥದತ್ತ ಸಾಗುತ್ತಿದೆ. ಇದರಲ್ಲಿ ಎಲ್ಲ ಜಾತಿ ಧರ್ಮಗಳ ಜನ ಭಾಗಿಯಾಗಿದ್ದಾರೆ. ಆದರೆ, ಈ ಪ್ರಕ್ರಿಯೆಯಲ್ಲಿ ನಿಮ್ಮ ಸಮುದಾಯ ಮಾತ್ರ ಕಾಣಸುತ್ತಿಲ್ಲ ಎಂಬ ಭಾವನೆ ಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಎಲ್ಲ ಕಷ್ಟಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಿ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಿಮಗೆ ಸರ್ಕಾರಿ ಯೋಜನೆಗಳ ಲಾಭ ಯಾಕೆ ಸಿಗಲಿಲ್ಲ. ಆ ಅವಧಿಯಲ್ಲಿ ನೀವು ಅನುಭವಿಸಿದ ಎಲ್ಲ ಕಷ್ಟಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಿ, ಅದನ್ನು ಬಹಿರಂಗವಾಗಿ ಹೇಳಿ. ಮುಸ್ಲಿಂ ಸಮುದಾಯದವರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸಬೇಕು. ಅವರ ಸ್ವಂತ ಭವಿಷ್ಯದ ಬಗ್ಗೆ ಆಲೋಚಿಸಬೇಕು ಯಾರೋ ಒಬ್ಬರು ಹೆದರಿಸುತ್ತಿದ್ದಾರೆ. ಭಯದ ವಾತಾವರಣ ನಿರ್ಮಿಸುತ್ತಿದ್ದಾರೆ ಎಂಬ ಕಾರಣಕ್ಕೆ ಯಾವ ಸಮಾಜವೂ ಸಹ ಜೀತದಾಳುಗಳಂತೆ ಬದುಕಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.